ಕೋಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ತನಿಖೆಗೆ ಸಹರಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ(ಇ.ಡಿ)ತಿಳಿಸಿದೆ.
ಅಸಹಕಾರ ತಂತ್ರಗಳನ್ನು ಅನುಸರಿಸುತ್ತಿರುವ ಪಾರ್ಥ ಚಟರ್ಜಿ ಅವರ ಕಸ್ಟಡಿಯನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಇ.ಡಿಕೋರಿದೆ.
‘ಚಟರ್ಜಿ ಅವರ ವಿಚಾರಣೆ ಪ್ರಕ್ರಿಯೆ ಮಾತ್ರವಲ್ಲದೆ, ಬಿಡುವಿನ ವೇಳೆಯಲ್ಲಿ ಅವರ ಚಟುವಟಿಕೆಗಳನ್ನೂ ಸಹ ವಿಡಿಯೊ ರೆಕಾರ್ಡ್ ಮಾಡಿದ್ದೇವೆ’ ಎಂದು ಇ.ಡಿ ತಿಳಿಸಿದೆ.
ಆಹಾರದ ಚಾರ್ಟ್ನ ಪ್ರಕಾರ, ಔಷಧಿಗಳನ್ನು ತೆಗೆದುಕೊಳ್ಳಲು ಹಾಗೂ ಆಹಾರವನ್ನು ಸೇವಿಸಲು ಚಟರ್ಜಿ ನಿರಾಕರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಕೆಲವು ವಿಡಿಯೊಗಳನ್ನು ನಮ್ಮ ಪರ ವಕೀಲರು ನ್ಯಾಯಾಲಯಕ್ಕೆ ನೀಡಬಹುದು ಇ.ಡಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪಶ್ಚಿಮ ಬಂಗಾಳ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಜುಲೈ 23ರಂದು ವಶಕ್ಕೆ ಪಡೆದಿದ್ದಾರೆ.
ನಟಿ, ರೂಪದರ್ಶಿ ಹಾಗೂ ಚಟರ್ಜಿ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಅಪಾರ್ಟ್ಮೆಂಟ್ನಲ್ಲಿ ಸರಿ ಸುಮಾರು ₹50 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.