ನವದೆಹಲಿ: ಪೆಗಾಸಸ್ ಗೂಢಚರ್ಯೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತನಿಖಾ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚಿಸಿದೆ.
ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಪೀಠವು ಈ ಸಂಬಂಧ ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 25ರಂದು ನಡೆಸುವುದಾಗಿ ಹೇಳಿದೆ.
ಈ ವೇಳೆ ಅರ್ಜಿದಾರರ ಪರ ವಕೀಲ ಸೌರಭ್ ಮಿಶ್ರಾ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು.
ಪಶ್ಚಿಮ ಬಂಗಾಳ ಸರ್ಕಾರವು ಕಳೆದ ತಿಂಗಳು ಪೆಗಾಸಸ್ ಗೂಢಚರ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಆಯೋಗವನ್ನು ರಚಿಸಿತ್ತು. ಈ ಆಯೋಗವು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೊಕೂರ್ ಮತ್ತು ಕಲ್ಕತ್ತ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜ್ಯೋತಿರ್ಮೇ ಭಟ್ಟಾಚಾರ್ಯ ಅವರನ್ನೊಳಗೊಂಡಿದೆ.