ನವದೆಹಲಿ: ಪೆಗಾಸಸ್ ಗೂಢಚರ್ಯೆ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸೋಮವಾರಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಪೀಠವು,‘ಈ ಅರ್ಜಿಗಳ ವಿಚಾರಣೆಯನ್ನು 10 ದಿನಗಳ ಬಳಿಕ ನಡೆಸಲಾಗುವುದು. ಯಾವ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಹೇಳಿದೆ.
ಈ ಪೀಠವು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಅನಿರುದ್ಧ್ ಬೋಸ್ ಅವರನ್ನು ಒಳಗೊಂಡಿದೆ.
‘ಅರ್ಜಿದಾರರ ಕೋರಿಕೆಯಂತೆ ಪ್ರಮಾಣಪತ್ರದಲ್ಲಿ ಮಾಹಿತಿ ಬಹಿರಂಗಪಡಿಸಿದರೇ ರಾಷ್ಟ್ರೀಯ ಭದ್ರತೆಗೆ ಧಕ್ಕೆ ಉಂಟಾಗಬಹುದು’ ಎಂದು ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು, ‘ಸರ್ಕಾರವು ರಾಷ್ಟ್ರೀಯ ಭದ್ರತೆಗೆ ಧಕ್ಕೆಯನ್ನುಂಟು ಮಾಡುವ ಯಾವುದೇ ವಿಷಯವನ್ನು ಬಹಿರಂಗಪಡಿಸಬೇಕಾಗಿಲ್ಲ’ ಎಂದಿದೆ.