ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ.
ವಕೀಲ ಎಂ.ಎಲ್. ಶರ್ಮಾ ಈ ಅರ್ಜಿ ಸಲ್ಲಿಸಿದ್ದಾರೆ. ಎಂಟು ಹಂತಗಳಲ್ಲಿ ಚುನಾವಣೆ ನಡೆಸುವುದರಿಂದ ಸಂವಿಧಾನ 14ನೇ ಮತ್ತು 21ನೇ ವಿಧಿಯನ್ನು (ಜೀವನದ ಹಕ್ಕು) ಉಲ್ಲಂಘಿಸುತ್ತದೆ. ಹೀಗಾಗಿ, ಈ ಬಗ್ಗೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಎಂದು ಶರ್ಮಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆ ಸಂದರ್ಭದಲ್ಲಿ ಧಾರ್ಮಿಕ ಘೋಷಣೆಗಳನ್ನು ಹಾಕುವವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸಿಬಿಐಗೆ ನಿರ್ದೇಶನ ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.
’ಜೈ ಶ್ರೀ ರಾಮ’ ಮತ್ತು ಇತರ ಧಾರ್ಮಿಕ ಘೋಷಣೆಗಳನ್ನು ಹಾಕುವುದರಿಂದ ಸೌಹಾರ್ದದತೆಗೆ ಧಕ್ಕೆಯಾಗುತ್ತದೆ ಮತ್ತು ಇದು 1951ರ ಜನಪ್ರತಿನಿಧಿಗಳ ಕಾಯ್ದೆ ಅನ್ವಯ ಅಪರಾಧವಾಗುತ್ತದೆ ಎಂದು ವಕೀಲ ಶರ್ಮಾ ತಿಳಿಸಿದ್ದಾರೆ.