ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಅಂಗವಾಗಿ ಇಂದು (ಶುಕ್ರವಾರ) ನಡೆಯಬೇಕಿದ್ದ ಪ್ರಚಾರ ಸಭೆಗಳನ್ನು ಪ್ರಧಾನಿ ನರೇಂದ್ರ ಮೋದಿ ರದ್ದುಪಡಿಸಿದ್ದಾರೆ. ಅವರು ನಾಲ್ಕು ಚುನಾವಣಾ ಸಭೆಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು.
ದೇಶದಲ್ಲಿನ ಕೋವಿಡ್–19 ಪರಿಸ್ಥಿತಿ ಕುರಿತು ಪರಿಶೀಲಿಸಲು ತಜ್ಞರು, ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಸಭೆ ನಡೆಸಲಿದ್ದಾರೆ.
‘ಕೋವಿಡ್–19 ಪರಿಸ್ಥಿತಿ ಕುರಿತು ಚರ್ಚಿಸಲು ಶುಕ್ರವಾರ ನಡೆಯಲಿರುವ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸುತ್ತಿರುವೆ. ಹೀಗಾಗಿ ನಾನು ಪಶ್ಚಿಮ ಬಂಗಾಳಕ್ಕೆ ಹೋಗುತ್ತಿಲ್ಲ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಪರ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಟಿಎಂಸಿ ಪರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಡೆಸುವ ಚುನಾವಣಾ ಸಭೆಗಳಿಗೆ ಹೆಚ್ಚು ಜನರು ಭಾಗವಹಿಸುತ್ತಿದ್ದರು.
ದೇಶದಲ್ಲಿ ಗುರುವಾರ 3.14 ಲಕ್ಷ ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 2 ಸಾವಿರಕ್ಕೂ ಹೆಚ್ಚು ಸೋಂಕಿತರು ಮೃತಪಟ್ಟಿದ್ದಾರೆ.
ಕೋವಿಡ್ ಕಾರಣದಿಂದಾಗಿ ಬಿಜೆಪಿ ವರಿಷ್ಠರು ಪಶ್ಚಿಮ ಬಂಗಾಳದಲ್ಲಿ ನಡೆಸಬೇಕಿದ್ದ ಚುನಾವಣೆ ಸಭೆಗಳನ್ನು ಮೊಟಕುಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಆರನೇ ಹಂತದ ಮತದಾನ ಗುರುವಾರ ಪೂರ್ಣಗೊಂಡಿದ್ದು, ಇದೇ 26 ಮತ್ತು 29ರಂದು ಏಳು ಮತ್ತು ಎಂಟನೇ ಹಂತದ ಮತದಾನ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.