ವಾರಾಣಸಿ: ವಾರಾಣಸಿಯಲ್ಲಿ ನಿರ್ಮಾಣವಾಗಿರುವ ಟೆಂಟ್ ನಗರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ₹1000 ಕೋಟಿಗೂ ಹೆಚ್ಚು ವೆಚ್ಚದ ವಿವಿಧ ಒಳನಾಡು ಜಲಸಾರಿಗೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಪವಿತ್ರ ನಗರದ ಗಂಗಾ ನದಿಯ ದಡದಲ್ಲಿರುವ ಪ್ರಸಿದ್ಧ ಘಾಟ್ಗಳ ಎದುರು ಟೆಂಟ್ ನಗರವನ್ನು ನಿರ್ಮಿಸಲಾಗಿದೆ.
ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ವಾರಾಣಾಸಿ ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿರುವ ಈ ಟೆಂಟ್ ಸಿಟಿಯು, ಪ್ರವಾಸಿಗರಿಗೆ ವಸತಿ ಸೌಕರ್ಯವನ್ನು ಒದಗಿಸುತ್ತದೆ. ಇಲ್ಲಿ ಶಾಸ್ತ್ರೀಯ ಸಂಗೀತ, ಯೋಗ ಮತ್ತಿತರ ಮನರಂಜನಾ ಕಾರ್ಯಕ್ರಮಗಳೂ ಇರಲಿವೆ. ಪ್ರವಾಸಿಗರು ಬೋಟ್ಗಳ ಮೂಲಕ ಈ ನಗರವನ್ನು ತಲುಪಬಹುದು.
ಟೆಂಟ್ ನಗರವು ಅಕ್ಟೋಬರ್ನಿಂದ ಜೂನ್ವರೆಗೆ ಪ್ರವಾಸಿಗರಿಗೆ ಲಭ್ಯವಿರಲಿದೆ. ಅನಂತರ ಮಳೆಗಾಲದಲ್ಲಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಕಾರಣ ಮೂರು ತಿಂಗಳು ಈ ಸೌಲಭ್ಯ ಲಭ್ಯವಿರುವುದಿಲ್ಲ.
ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ, ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಭಾಗಿಯಾಗಿದ್ದರು.