ನವದೆಹಲಿ: ಪಿಎಂಸಿ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. 29ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನಾ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಭಾನುವಾರ ಸಮನ್ಸ್ ಜಾರಿ ಮಾಡಿದೆ.
ವರ್ಷಾ ಅವರಿಗೆ ಇ.ಡಿ ಜಾರಿ ಮಾಡಿದ ಮೂರನೇ ಸಮನ್ಸ್ ಇದಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅವರಿಗೆ ಈ ಮೊದಲು ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಆರೋಗ್ಯಕ್ಕೆ ಸಂಬಂಧಿಸಿದ ಕಾರಣ ನೀಡಿ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ಇ.ಡಿ ಮೂಲಗಳು ಹೇಳಿವೆ.
‘ವರ್ಷಾ ಅವರು ಬ್ಯಾಂಕ್ನಿಂದ ಹಣ ಪಡೆದಿದ್ದರು ಎನ್ನಲಾಗಿದೆ. ನಂತರ ಬ್ಯಾಂಕ್ ಲೆಕ್ಕಪತ್ರದಿಂದ ಈ ಹಣ ನೀಡಿದ ವಿವರಗಳನ್ನು ತೆಗೆದು ಹಾಕಲಾಗಿತ್ತು ಎಂಬ ಆರೋಪಗಳ ಹಿನ್ನೆಲೆಯಲ್ಲಿ ವರ್ಷಾ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ’ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.
ಖಡ್ಸೆಗೂ ಸಮನ್ಸ್: ಇತ್ತೀಚೆಗಷ್ಟೇ ಬಿಜೆಪಿ ತೊರೆದು, ಎನ್ಸಿಪಿ ಸೇರಿರುವ ಏಕನಾಥ್ ಖಡ್ಸೆ ಅವರಿಗೂ ಇ.ಡಿ ಸಮನ್ಸ್ ಜಾರಿ ಮಾಡಿದ್ದು, ಡಿ. 30ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಪುಣೆಯ ಭೋಸರಿ ಪ್ರದೇಶದಲ್ಲಿನ ಜಮೀನು ಪರಭಾರೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಖಡ್ಸೆ ಅವರನ್ನು ಇ.ಡಿ ವಿಚಾರಣೆಗೆ ಒಳಪಡಿಸಲಿದೆ.