ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಪ್ರತಿಪಕ್ಷಗಳಿಗೆ ಸಚಿವ ಮನಸುಖ್

Last Updated 23 ಜುಲೈ 2021, 10:15 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್ ಲಸಿಕೆ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡಬಾರದು ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಹೇಳಿದ್ದಾರೆ. ಕೊರೊನಾ ವೈರಸ್ ವಿರುದ್ಧ ಜನರು ಲಸಿಕೆ ಪಡೆದುಕೊಳ್ಳುವುದನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಸಂಸತ್‌ನ ಮುಂಗಾರು ಅಧಿವೇಶನದ ಸಂದರ್ಭ ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಫೈಜರ್ ಲಸಿಕೆ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಆ ಕಂಪನಿ ಜೊತೆ ಸರ್ಕಾರವು ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪ್ರಧಾನಿ ನರೇಂದ್ರ ಮೋದಿ ಅವರೂ ಇದನ್ನು ಹಲವು ಬಾರಿ ಹೇಳಿದ್ದಾರೆ ಎಂದು ಶಿವಸೇನಾ ಸಂಸದ ರಾಹುಲ್ ಶೆವಾಲೆ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮಾಂಡವಿಯ ಹೇಳಿದ್ದಾರೆ.

ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಆದರೆ ಅಂಕಿಅಂಶಗಳನ್ನು ನಿಮ್ಮ ಮುಂದಿಡಲು ಬಯಸುತ್ತೇನೆ ಎಂದು ಸಚಿವರು ಹೇಳಿದ್ದಾರೆ. ಲಸಿಕೆ ವಿಚಾರದಲ್ಲಿ ರಾಜ್ಯ ಸರ್ಕಾರಗಳು ಮತ್ತು ಮುಖ್ಯಮಂತ್ರಿಗಳ ಜತೆ ಪ್ರಧಾನಿಯವರು ಈವರೆಗೆ 20 ಸಭೆಗಳನ್ನು ನಡೆಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆರೋಗ್ಯವು ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಾಗಿದ್ದು ಈ ವಿಚಾರದಲ್ಲಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಪ್ರತಿಪಕ್ಷಗಳ ಆಡಳಿತವಿರುವ ಕೆಲವು ರಾಜ್ಯಗಳು ಮನವಿ ಮಾಡಿವೆ. ನಮಗೂ ಲಸಿಕೆ ಖರೀದಿಗೆ ಅವಕಾಶ ನೀಡಬೇಕು ಎಂದು ಕೆಲವು ರಾಜ್ಯಗಳು ಮನವಿ ಮಾಡಿವೆ. ಲಸಿಕೆ ಖರೀದಿಗೆ ಟೆಂಡರ್ ಕರೆಯುವುದಾಗಿ ರಾಜ್ಯಗಳು ತಿಳಿಸಿವೆ. ಇದಕ್ಕೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಯಾವುದೇ ಸಹಾಯವನ್ನು ಬೇಕಾದರೂ ಮಾಡಲು ಸಿದ್ಧ ಎಂದು ಮೋದಿ ಅವರು ಭರವಸೆ ನೀಡಿದ್ದಾರೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT