ಡೆಹರಾಡೂನ್: ಕೊರೊನಾವೈರಸ್ ಸೋಂಕುಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಉತ್ತರಾಖಂಡ ರಾಜ್ಯದಲ್ಲಿ ಎಲ್ಲ ರೀತಿಯ ಚುನಾವಣಾ ಸಮಾವೇಶ, ಪ್ರತಿಭಟನೆ, ಧರಣಿಗಳನ್ನು ನಿರ್ಬಂಧಿಸಲಾಗಿದೆ.
ಈ ಕುರಿತು ಉತ್ತರಾಖಂಡ ಸರ್ಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ.
‘ಜನವರಿ 16 ರವರೆಗೆ ಕೋವಿಡ್ ತಡೆ ನಿಯಮಾವಳಿಗಳನ್ನು ಜಾರಿಗೊಳಿಸಲಾಗಿದ್ದು ಅದರಲ್ಲಿ ಚುನಾವಣೆಗೆ ಸಂಬಂಧಿಸಿದ ಎಲ್ಲ ರೀತಿಯ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಯಾವುದೇ ಸಾರ್ವಜನಿಕ ಸಮಾವೇಶಗಳನ್ನು ಆಯೋಜಿಸುವಂತಿಲ್ಲ’ ಎಂದು ಮುಖ್ಯ ಕಾರ್ಯದರ್ಶಿ ಎಸ್.ಎಸ್. ಸಂಧು ತಿಳಿಸಿದ್ದಾರೆ.
ಸದ್ಯದಲ್ಲೇ ಉತ್ತರಾಖಂಡ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಇಂದು ಮಧ್ಯಾಹ್ನ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಬಹುದು ಎನ್ನಲಾಗಿದೆ. ಅಲ್ಲದೇ ಉತ್ತರಾಖಂಡ ಹೈಕೋರ್ಟ್ ಚುನಾವಣೆಗೆ ಸಂಬಂಧಿಸಿದಂತೆ ವರ್ಚುವಲ್ ಸಮಾವೇಶ, ಆನ್ಲೈನ್ ವೋಟಿಂಗ್ ನಡೆಸಬಹುದೇ ಎಂದು ಚುನಾವಣಾ ಆಯೋಗವನ್ನು ಕೇಳಿದೆ.
ಉತ್ತರಾಖಂಡದಲ್ಲಿ ಕಳೆದ 24 ಗಂಟೆಯಲ್ಲಿ 800 ಅಧಿಕ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಉತ್ತರಾಖಂಡದಲ್ಲಿ ಜನವರಿ 16 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ನೈಟ್ ಕರ್ಫ್ಯೂ ವಿಧಿಸಲಾಗಿದೆ.