ನವದೆಹಲಿ: ಅಸ್ಸಾಂನ ಒಂದು ವಿಧಾನಸಭಾ ಕ್ಷೇತ್ರಕ್ಕೆ ಇದೇ 30ರಂದು ನಡೆಯಲಿರುವ ಉಪ ಚುನಾವಣೆಯ ಪ್ರಚಾರದ ವೇಳೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರುಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಅವರಿಗೆ ಎಚ್ಚರಿಕೆ ನೀಡಿ ಬಿಟ್ಟುಬಿಟ್ಟಿದೆ.
‘ಬಿಜೆಪಿಯ ತಾರಾ ಪ್ರಚಾರಕರಾದ ಶರ್ಮಾ ಅವರು ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ತಾನು ನೀಡಿರುವ ಸಲಹೆ/ಸೂಚನೆಗಳಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ‘ ಎಂದು ಚುನಾವಣಾ ಆಯೋಗ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
‘ಇನ್ನು ಮುಂದೆ ಪ್ರಚಾರದ ವೇಳೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವಾಗ ಮಾದರಿ ನೀತಿ ಸಂಹಿತೆಯ ನಿಬಂಧನೆ ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಎಚ್ಚರಿಕೆ ನೀಡುವ ಜೊತೆಗೆ, ಜಾಗರೂಕರಾಗಿ ಮತ್ತು ಸಂಯಮದಿಂದ ವರ್ತಿಸಬೇಕು‘ ಎಂದು ಆದೇಶದಲ್ಲಿ ತಿಳಿಸಿದೆ.
ಉಪ ಚುನಾವಣೆಯ ಪ್ರಚಾರದ ವೇಳೆ ಶರ್ಮಾ ಅವರು ರಸ್ತೆಗಳ ಅಭಿವೃದ್ಧಿ ಮತ್ತು ಇತರೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಭರವಸೆ ನೀಡುವ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದರು. ಈ ಸಂಬಂಧ ಆಯೋಗ ಸೋಮವಾರ ಶರ್ಮಾ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು.