ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತ ಅ. 25ರ ವೇಳೆಗೆ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆ.
ಬಂಗಾಳ ಕೊಲ್ಲಿಯಲ್ಲಿ ಗುರುವಾರ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತವು ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ತೀವ್ರತೆ ಪಡೆಯಲಿದೆ. ಇದು ಒಡಿಶಾ ಕರಾವಳಿ ಮೂಲಕ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದತ್ತ ಸಾಗಲಿದೆ ಎಂದು ಇಲಾಖೆ ತಿಳಿಸಿದೆ.
ಚಂಡಮಾರುತವು ಪಶ್ಚಿಮ ಹಾಗೂ ವಾಯವ್ಯ ಭಾಗದತ್ತ ಸಾಗಿ, ಆಗ್ನೇಯ ಭಾಗ ಹಾಗೂ ಪೂರ್ವ–ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅ. 22ರ ವೇಳೆಗೆ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುವುದು. ನಂತರ, 23ರ ವೇಳೆಗೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಇಲಾಖೆ ತಿಳಿಸಿದೆ.
ಅ. 23ರಂದು ಪುರಿ, ಕೇಂದ್ರಪಾಡ ಹಾಗೂ ಜಗತ್ಸಿಂಗ್ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭುವನೇಶ್ವರದಲ್ಲಿರುವ ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.