ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀದಿ ಕೈಬಿಟ್ಟ ಕಿಶೋರ್‌: ಬಿಜೆಪಿ ವ್ಯಂಗ್ಯ

Last Updated 2 ಮಾರ್ಚ್ 2021, 16:45 IST
ಅಕ್ಷರ ಗಾತ್ರ

ನವದೆಹಲಿ: ‘ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಪ್ರಕಟವಾಗುವ ಮೊದಲೇ ದೀದಿ (ಮಮತಾ ಬ್ಯಾನರ್ಜಿ) ಅವರ ರಾಜಕೀಯ ಸಲಹೆಗಾರ, ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರು ದೀದಿಯನ್ನು ತೊರೆದು, ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಅವರ ಪ್ರಧಾನ ಸಲಹೆಗಾರರಾಗಿ ಸೇರಿಕೊಂಡಿದ್ದಾರೆ. ಇದು ಸಾಕಷ್ಟು ಸಂಗತಿಗಳನ್ನು ಧ್ವನಿಸುತ್ತದೆ’ ಎಂದು ಬಿಜೆಪಿ ಮಂಗಳವಾರ ಲೇವಡಿ ಮಾಡಿದೆ.

294 ಶಾಸಕರಿರುವ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಕೇಸರಿ ಪಕ್ಷವು 200 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿಯ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ಅವರು ಪ್ರತಿಪಾದಿಸುತ್ತಿರುವುದನ್ನು ಉಲ್ಲೇಖಿಸಿರುವ ಬಿಜೆಪಿ ವಕ್ತಾರ ಸಂಬಿತ್‌ ಪಾತ್ರ, ‘ಈಗ ಇದನ್ನು ಎಲ್ಲರೂ ಒಪ್ಪಿಕೊಳ್ಳುತ್ತಿದ್ದಾರೆ. ರಾಜಕೀಯ ಸಲಹೆಗಾರ ಎಂದು ಕರೆಸಿಕೊಳ್ಳುವವರಿಗೂ ಇದು ಅರ್ಥವಾಗಿದೆ’ ಎಂದು ಪ್ರಶಾಂತ್‌ ಕಿಶೋರ್‌ ವಿರುದ್ಧ ವ್ಯಂಗ್ಯವಾಡಿದರು.

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಿಂದ ವಿಧಾನಸಭಾ ಚುನಾವಣೆ8 ಹಂತಗಳಲ್ಲಿ ನಡೆಯಲಿದೆ. ಆಡಳಿತಾರೂಢ ಟಿಎಂಸಿಯ ಪ್ರಮುಖ ಚುನಾವಣಾ ತಂತ್ರಗಾರನಾಗಿ ಪ್ರಶಾಂತ್‌ ಕಿಶೋರ್ ಕಾರ್ಯನಿರ್ವಹಿಸುತ್ತಿದ್ದಾರೆ. ‍ಪ್ರಶಾಂತ್‌ ಕಳೆದ ಕೆಲವು ವರ್ಷಗಳಿಂದ ವಿವಿಧ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ವಿರೋಧಿ ಪಕ್ಷಗಳ ಪಾಳಯದಲ್ಲಿ ಕೆಲಸ ಮಾಡುತ್ತಿದ್ದಾರೆ.

ಪ್ರಶಾಂತ್ ಕಿಶೋರ್ ಅವರು ತಮ್ಮ ಪ್ರಧಾನ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರವಷ್ಟೇ ತಿಳಿಸಿದ್ದರು. ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ವಿಧಾನಸಭೆಗೂ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT