ನವದೆಹಲಿ:ಈ ಬಾರಿ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿಯನ್ನಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸಿರುವ ಬಿಜೆಪಿಗೆ, ಆ ಸಮುದಾಯದ ಕಲ್ಯಾಣದ ಬಗ್ಗೆ ಬದ್ಧತೆಯೇ ಇಲ್ಲ ಎಂದುಯಶವಂತ ಸಿನ್ಹಾ ಆರೋಪಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಎನ್ಡಿಎಯೇತರ ಪಕ್ಷಗಳ ಅಭ್ಯರ್ಥಿಯಾಗಿರುವ ಸಿನ್ಹಾ,ಮಧ್ಯಪ್ರದೇಶದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರಿಗೆ ಬೆಂಕಿ ಹಚ್ಚಿರುವ ಪ್ರಕರಣದ ವಿಚಾರವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
'ದಶಕಗಳಿಂದಲೂ ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಗೆ ಬೆಂಕಿ ಹಚ್ಚಿರುವುದನ್ನು ಬಲವಾಗಿ ಖಂಡಿಸುತ್ತೇನೆ. ಈ ಪ್ರಕರಣವುಬುಡಕಟ್ಟು ಸಮುದಾಯದ ಕಲ್ಯಾಣದ ವಿಚಾರದಲ್ಲಿಬಿಜೆಪಿ ಬದ್ಧತೆ ಹೊಂದಿಲ್ಲ ಎಂಬುದನ್ನು ತೋರಿಸುತ್ತದೆ' ಎಂದು ಟ್ವೀಟ್ ಮಾಡಿದ್ದಾರೆ.
I strongly condemn the burning of a tribal lady in Guna district of Madhya Pradesh which has been ruled by BJP for decades. Shows how shallow its commitment is to tribal welfare.
— Yashwant Sinha (@YashwantSinha) July 4, 2022
ಮಧ್ಯಪ್ರದೇಶದ ಗುನಾ ಜಿಲ್ಲೆಯ ಧನೋರಿಯಾ ಗ್ರಾಮದ ಮಹಿಳೆ ರಾಮ್ಪ್ಯಾರಿ ಬಾಯಿ (45) ಅವರಿಗೆ ಹೊಲಕ್ಕೆ ಹೋಗಿದ್ದ ವೇಳೆ ಬೆಂಕಿ ಹಚ್ಚಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರೂ ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಮಹಿಳಾ ಆಯೋಗವು ಈ ಪ್ರಕರಣವನ್ನುಘೋರ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಮಧ್ಯಪ್ರದೇಶದಲ್ಲೇ ಮತ್ತೊಂದು ಪ್ರಕರಣ
ವಿವಾಹೇತರ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಬುಡಕಟ್ಟು ಮಹಿಳೆಯೊಬ್ಬರಿಗೆ ಥಳಿಸಿರುವ ಪ್ರಕರಣದೆವಾಸ್ ಜಿಲ್ಲೆಯಬೋರ್ಪದವ್ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮಹಿಳೆ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಿ ಆಕೆಯ ಪತಿಯೇ ಗ್ರಾಮಸ್ಥರ ಎದುರುಥಳಿಸಿದ್ದಾನೆ. ನಂತರ ಗ್ರಾಮಸ್ಥರು, ಚಪ್ಪಲಿಯ ಹಾರ ಹಾಕಿಸಿ, ಗಂಡನನ್ನು ಹೆಗಲ ಮೇಲೆ ಹೊತ್ತು ಸಾಗುವಂತೆ ಮಹಿಳೆಗೆ ಕಿರುಕುಳ ನೀಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪತಿಯೂ ಸೇರಿದಂತೆ ಒಟ್ಟು 9 ಜನರನ್ನು ಬಂಧಿಸಲಾಗಿದೆ ಎಂದುಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಮಹಿಳೆಯು, ತಮಗೆ 15 ವರ್ಷವಿದ್ದಾಗಲೇ ಮದುವೆ ಮಾಡಲಾಯಿತು. ಪತಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದುದರಿಂದ ಮನೆಬಿಟ್ಟು ಹೋದೆ ಎಂದು ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.