ಕಾನ್ಪುರ, ಉತ್ತರ ಪ್ರದೇಶ:ಜೂನ್ 3ರಂದು ಕಾನ್ಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆಯ ವಿರುದ್ಧ ಕಾನ್ಪುರದಲ್ಲಿ ಪ್ರತಿಭಟನೆ ನಡೆಸುವ ವೇಳೆ ಹಿಂಸಾಚಾರ ಉಂಟಾಗಿತ್ತು.
‘ಹಾಜಿ ವಾಸಿ ಎಂಬಾತ ಬಂಧಿತ ಆರೋಪಿಯಾಗಿದ್ದು, ಹಿಂಸಾಚಾರಕ್ಕೆ ಈತ ಹಣ ಒದಗಿಸಿದ್ದ. ವಾಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ವೇಳೆ ಲಖನೌ ಬಳಿಯ ಅಮೌಸಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಸಿ ಅವರ ಹಿರಿಯ ಮಗ ಅಬ್ದುರ್ ರಹಮಾನ್ನನ್ನೂ ಕೂಡ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬಂಧಿಸಲಾಗಿದೆ.
‘ವಾಸಿಯನ್ನು ಬಂಧಿಸಿದ ನಂತರ ಕಾನ್ಪುರಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಆತನನ್ನು ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ. ಬಳಿಕ ಕೋರ್ಟ್ನ ನಿರ್ದೇಶನದಂತೆ ಕಾರ್ಯನಿರ್ವಹಿಸಲಾಗುವುದು’ ಎಂದು ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ತಿವಾರಿ ಹೇಳಿದರು.
ಸದ್ಯ ಹಾಜಿ ವಾಸಿ ಸೇರಿದಂತೆ ಈ ಪ್ರಕರಣದಲ್ಲಿ ಒಟ್ಟು 61 ಮಂದಿಯನ್ನು ಬಂಧಿಸಲಾಗಿದೆ.