ನವದೆಹಲಿ: ಒಂಬತ್ತು ವರ್ಷದ ದಲಿತ ಬಾಲಕಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಅಮಿತ್ ಶಾ ಉತ್ತರ ಪ್ರದೇಶಕ್ಕೆ 'ಪ್ರಮಾಣ ಪತ್ರಗಳನ್ನು ವಿತರಿಸಲು' ಹೋದರು ಆದರೆ, 'ತಮ್ಮ ಜವಾಬ್ದಾರಿಯನ್ನು ನಿಭಾಯಿಸುವುದನ್ನು ಮರೆತರು' ಎಂದು ವಾಗ್ದಾಳಿ ನಡೆಸಿದ್ದಾರೆ.
ಪೊಲೀಸರ ಪ್ರಕಾರ, ನೈರುತ್ಯ ದೆಹಲಿ ಹಳೆಯ ನಂಗಲ್ ಗ್ರಾಮದಲ್ಲಿ ಪಾದ್ರಿಯೊಬ್ಬರು ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬಲವಂತವಾಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಹೀಗಿದ್ದರೂ ಬಾಲಕಿಯ ಸಾವು ನಿಗೂಢವಾಗಿದೆ ಎಂದು ತಿಳಿಸಿದ್ದಾರೆ.
'ದೆಹಲಿಯ ನಂಗಲ್ನಲ್ಲಿ ನಡೆದಿರುವ ಘಟನೆ ನೋವಿನಿಂದ ಕೂಡಿದೆ ಮತ್ತು ಖಂಡನೀಯ. ಈಗ ಆಕೆಯ ಕುಟುಂಬಕ್ಕೆ ಏನಾಗುತ್ತಿದೆ ಎಂಬುದನ್ನು ಯೋಚಿಸಿ' ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
'ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹೊಣೆ ಹೊತ್ತಿರುವ ಗೃಹ ಸಚಿವರು ಪ್ರಮಾಣಪತ್ರಗಳನ್ನು ವಿತರಿಸಲು ಉತ್ತರ ಪ್ರದೇಶಕ್ಕೆ ತೆರಳಿದ್ದರು. ಆದರೆ, ಅವರ ಮೇಲಿದ್ದ ಜವಾಬ್ದಾರಿಯನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ' ಎಂದು ದೂರಿದ್ದಾರೆ.
ಹಾಥರಸ್ನಿಂದ ನಂಗಲ್ವರೆಗೆ 'ಜಂಗಲ್ ರಾಜ್' ಆಗಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
ಈ ವಾರದ ಆರಂಭದಲ್ಲಿ ಶಾ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಯೋಗಿ ಆದಿತ್ಯನಾಥ್ ಅವರ ಸರ್ಕಾರವು ರಾಜ್ಯವನ್ನು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ 'ಅಗ್ರಸ್ಥಾನ'ಕ್ಕೆ ಕೊಂಡೊಯ್ದಿದೆ ಎಂದು ಪ್ರಶಂಸಿಸಿದ್ದರು.
ನಂಗಲ್ ಘಟನೆಯ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ದಲಿತರ ಮಗಳು ಕೂಡ ದೇಶದ ಮಗಳು' ಎಂದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.