ಗುವಾಹಟಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಅಸ್ಸಾಂಗೆ ಭೇಟಿ ನೀಡಲಿದ್ದಾರೆ.
ಇಲ್ಲಿನ ಪ್ರಸಿದ್ಧ ಕಾಮುಖ್ಯ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಅಧಿಕೃತವಾಗಿ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
ಮೊದಲ ಹಂತದಲ್ಲಿ ಅಸ್ಸಾಂನ ಉತ್ತರ ಭಾಗದಲ್ಲಿ ಚುನಾವಣೆ ಪ್ರಚಾರ ನಡೆಸಲಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ. ಮಂಗಳವಾರ( ಮಾ.2)ದಂದು ತೇಜ್ಪುರದಲ್ಲಿ ಬೃಹತ್ ಚುನಾವಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.
ಈಗಾಗಲೇ ರಾಹುಲ್ ಗಾಂಧಿ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ಪ್ರಿಯಾಂಕ ಅಸ್ಸಾಂ ರಾಜ್ಯದಲ್ಲಿ ಮೂರು ಹಂತದಲ್ಲಿ ಪ್ರಚಾರ ನಡೆಸಲಿದ್ದಾರೆ ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.
ಪ್ರಿಯಾಂಕ ಗಾಂಧಿ ಅಸ್ಸಾಂ ಸೇರಿದಂತೆ, ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ ರಾಜ್ಯಗಳಲ್ಲೂ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ಆಯಾ ರಾಜ್ಯಗಳ ಕಾಂಗ್ರೆಸ್ ಘಟಕದ ವಕ್ತಾರರು ದಿನಾಂಕಗಳನ್ನು ನಿಗದಿಪಡಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಪಂಚ ರಾಜ್ಯಗಳ ಚುನಾವಣೆ ಮಾರ್ಚ್ 27ರಿಂದ ಆರಂಭಗೊಂಡು ಏಪ್ರಿಲ್ ಕೊನೆಯ ವಾರದಲ್ಲಿ ಮುಕ್ತಯವಾಗಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.