ನವದೆಹಲಿ: ಕೋವಿಡ್ ಪಿಡುಗಿನ ಎರಡನೇ ಅಲೆ ಸಂದರ್ಭದಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಸಾವುಗಳು ಸಂಭವಿಸಿಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ವಾಗ್ದಾಳಿ ನಡೆಸಿದರು.
‘ಪಿಡುಗಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಮ್ಲಜನಕದ ತ್ವರಿತ ಸಾಗಣೆ ಹಾಗೂ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿಲ್ಲ. ಇದರಿಂದಾಗಿಯೇ ಸಾವುಗಳು ಸಂಭವಿಸಿದವು’ ಎಂದು ಟೀಕಿಸಿದರು.
‘ಕೋವಿಡ್ನ 2ನೇ ಅಲೆ ವೇಳೆ, ಆಮ್ಲಜನಕದ ಕೊರತೆಯಿಂದಾಗಿ ಸಾವು ಸಂಭವಿಸಿದವು’ ಎಂದು ರಾಜ್ಯಗಳು ಹಾಗೂ ಕೇಂದ್ರಾಡಳಿತಗಳು ವರದಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಮಂಗಳವಾರ ಹೇಳಿತ್ತು.
‘ಸಂಸದೀಯ ಸಮಿತಿ ಹಾಗೂ ಉನ್ನತಾಧಿಕಾರ ಸಮಿತಿ ನೀಡಿದ್ದ ಸಲಹೆಗಳನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿತು. ಆಮ್ಲಜನಕದ ಸಮರ್ಪಕ ಪೂರೈಕೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಟೀಕಿಸಿದರು.
‘ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ’ ಎಂದೂ ಹೇಳಿದರು.