ನವದೆಹಲಿ: ನವದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಸಮೀಪ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ದೆಹಲಿಯ ಹೃದಯಭಾಗದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಕಳೆದ ಶುಕ್ರವಾರ ಸಂಜೆ ಲಘು ಪ್ರಮಾಣದ ಐಇಡಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಲವು ಕಾರುಗಳಿಗೆ ಹಾನಿಯಾಗಿತ್ತು. ಯಾವುದೇ ಜೀವ ಹಾನಿಯಾಗಿರಲಿಲ್ಲ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿ ಘಟನೆಯನ್ನು ಖಂಡಿಸಿರುವುದಾಗಿ ಹೇಳಿದ್ದಾರೆ. ಈ ಕೃತ್ಯಕ್ಕೆ ಕಾರಣರಾದವರನ್ನು ಪತ್ತೆ ಮಾಡಿ, ಶಿಕ್ಷೆ ವಿಧಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
ಘಟನೆಯ ಕುರಿತು ನಡೆಯುತ್ತಿರುವ ತನಿಖೆ ಬಗ್ಗೆ ಎರಡೂ ದೇಶದ ಪ್ರಧಾನಿಗಳೂ ತೃಪ್ತಿ ವ್ಯಕ್ತಪಡಿಸಿದ್ದಾರೆ.