ಜೈಪುರ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಭಾಗವಾಗಿ, ಸಂಸತ್ ಭವನದ ಬಳಿಯೂ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ರೈತರು ಸಿದ್ಧರಿದ್ದಾರೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.
ಇಲ್ಲಿನ ವಿದ್ಯಾಧರನಗರದ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಕಿಸಾನ್ ಮಹಾಪಂಚಾಯತ್’ನಲ್ಲಿ ಮಾತನಾಡಿದ ಅವರು, ‘ರೈತರ ಒಗ್ಗಟ್ಟನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದರು.
‘ಅಗತ್ಯ ಎನಿಸಿದರೆ, ಕೃಷಿ ಉತ್ಪನ್ನ ಮಾರಾಟ ಮಾಡುವ ಸಲುವಾಗಿ ರೈತರು ಸಂಸತ್ ಭವನದತ್ತ ತೆರಳುವರು. ಇದಕ್ಕಾಗಿ ಯಾವುದೇ ಸಂದರ್ಭದಲ್ಲಿ ದೆಹಲಿಯತ್ತ ಹೆಜ್ಜೆ ಹಾಕಲು ಎಲ್ಲ ರೈತರು ಸಿದ್ಧರಾಗಿರಬೇಕು’ ಎಂದು ಹೇಳಿದರು.