ಚಂಡೀಗಢ: 'ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ನನ್ನ ಪ್ರಧಾನ ಸಲಹೆಗಾರರಾಗಿ ಸೇರಿಕೊಂಡಿದ್ದಾರೆ,' ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಅಮರಿಂದರ್ ಸಿಂಗ್ 'ಪ್ರಶಾಂತ್ ಕಿಶೋರ್ ಅವರು ನನ್ನ ಪ್ರಧಾನ ಸಲಹೆಗಾರರಾಗಿ ಸೇರಿಕೊಂಡಿದ್ದಾರೆ ಎಂಬ ವಿಷಯ ಹಂಚಿಕೊಳ್ಳಲು ಸಂತೋಷವಾಗಿದೆ. ಪಂಜಾಬ್ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ,' ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಸದ್ಯದ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
ಸದ್ಯ, ಕಿಶೋರ್ ಅವರ ಕಂಪನಿ, 'ಭಾರತೀಯ ರಾಜಕೀಯ ಕ್ರಿಯಾ ಸಮಿತಿ' (ಐ-ಪಿಎಸಿ) ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ನೆರವು ನೀಡುತ್ತಿದೆ.
ಚುನಾವಣಾ ಪ್ರಚಾರಕ್ಕೆ ಪ್ರಶಾಂತ್ ಕಿಶೋರ್ ಅವರನ್ನು ಕರೆಸಬೇಕೇ ಬೇಡವೇ ಎಂದು ಕಾಂಗ್ರೆಸ್ ಶಾಸಕರನ್ನು ಕೇಳಲಾಯಿತು. 80 ಶಾಸಕರ ಪೈಕಿ 55 ಮಂದಿ ಪ್ರಶಾಂತ್ ಕಿಶೋರ್ ಅಗತ್ಯವಿದೆ ಎಂದು ಹೇಳಿದ್ದಾರೆ ಎಂದು ಸಿಎಂ ಸಿಂಗ್ ತಿಳಿಸಿದ್ದಾರೆ.
ಈ ಹಿಂದಿನ ಚುನಾವಣೆಯಲ್ಲೂ ಪ್ರಶಾಂತ್ ಕಿಶೋರ್ ಅವರು ಪಂಜಾಬ್ನಲ್ಲಿ ಅಮರಿಂದರ್ ಸಿಂಗ್ ಪರ ಕೆಲಸ ಮಾಡಿದ್ದರು. ಅಮರಿಂದರ್ ಸಿಂಗ್ ಮುಖ್ಯಮಂತ್ರಿಯಾಗಿದ್ದರು.
ಪ್ರಶಾಂತ್ ಕಿಶೋರ್ ಅವರು 2014ರ ಲೋಕಸಭೆ ಚುನಾವಣೆ ವೇಳೆ ಮೋದಿ ಅವರ ಪ್ರಚಾರ ಉಸ್ತುವಾರಿ ವಹಿಸಿಕೊಂಡಿದ್ದರು.