ಚಂಡೀಗಡ: ಬಿಎಸ್ಎಫ್ (ಗಡಿ ಭದ್ರತಾ ಪಡೆ) ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸುವುದಾಗಿ ಪಂಜಾಬ್ ಸರ್ಕಾರ ಹೇಳಿದೆ.
ಪಂಜಾಬ್ ಪಾಕಿಸ್ತಾನದೊಂದಿಗೆ 545 ಕಿ.ಮೀ ಗಡಿ ಹೊಂದಿದ್ದು, ಬಿಎಸ್ಎಫ್ ರಕ್ಷಣೆ ನೀಡುತ್ತಿದೆ.
ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಿದ್ದೇವೆ. ಪಂಜಾಬ್ನಲ್ಲಿ ಬಿಎಸ್ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ ನಿರ್ಧಾರದ ವಿರುದ್ಧ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಲಿದ್ದೇವೆ. ಕೇಂದ್ರ ಈ ನಿರ್ಧಾರ ಒಕ್ಕೂಟ ವ್ಯವಸ್ಥೆಯ ಮೇಲಿನ ಹೊಡೆತ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.
ಈ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದೂ ಅವರು ಹೇಳಿದ್ದಾರೆ. ಆದರೆ, ಬಿಜೆಪಿ ಸಭೆಯನ್ನು ಬಹಿಷ್ಕರಿಸುವುದಾಗಿ ಹೇಳಿದೆ.
ಬಿಎಸ್ಎಫ್ನ ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಣೆ ನಿರ್ಧಾರವು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯತ್ನ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೋಮವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಪಂಜಾಬ್, ಪಶ್ಚಿಮ ಬಂಗಾಳ, ಅಸ್ಸಾಂನ ಅಂತರರಾಷ್ಟ್ರೀಯ ಗಡಿ ಪ್ರದೇಶಗಳಲ್ಲಿ 15 ಕಿಲೋಮೀಟರ್ ಬದಲಿಗೆ 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ, ಜಪ್ತಿ ಹಾಗೂ ಬಂಧನಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರ ಬಿಎಸ್ಎಫ್ ಕಾಯ್ದೆಗೆ ಇತ್ತೀಚೆಗೆ ತಿದ್ದುಪಡಿ ತಂದಿದೆ.
ಪಂಜಾಬ್ ಗಡಿಯಲ್ಲಿ ಮಾದಕವಸ್ತು ಕಳ್ಳಸಾಗಣೆ ನಡೆಯುತ್ತಿದೆ ಎಂಬ ಆರೋಪವಿದೆ. ಪಾಕಿಸ್ತಾನವು ಡ್ರೋನ್ಗಳನ್ನು ಬಳಸಿಕೊಂಡು ಭಾರತದ ಗಡಿ ಪ್ರದೇಶಗಳಿಗೆ ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳನ್ನು ಕಳುಹಿಸುತ್ತಿರುವ ಪ್ರಕರಣಗಳೂ ಇತ್ತೀಚೆಗೆ ವರದಿಯಾಗಿದ್ದವು.