ಚಂಡೀಗಡ: ಪಂಜಾಬ್ ಮುಖ್ಯಮಂತ್ರಿಯಾಗಿ ಭಗತ್ ಸಿಂಗ್ ಅವರ ಊರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ ಮಾನ್ ಹೇಳಿದ್ದಾರೆ.
ರಾಜಭವನದ ಬದಲು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಊರಾದ ಖಟ್ಕಡ್ಕಲಾಂನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವೆ ಎಂದು ಭಗವಂತ ಮಾನ್ ಹೇಳಿರುವುದಾಗಿ ‘ಎಎನ್ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಪಂಜಾಬ್ನಲ್ಲಿ ಮತ ಎಣಿಕೆ ಪ್ರಗತಿಯಲ್ಲಿದ್ದು, 93 ಕ್ಷೇತ್ರಗಳಲ್ಲಿ ಎಎಪಿ ಮುನ್ನಡೆ ಕಾಯ್ದುಕೊಂಡಿದೆ. ಪಕ್ಷವು ಸ್ಪಷ್ಟ ಬಹುಮತ ಗಳಿಸುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ 16, ಶಿರೋಮಣಿ ಅಕಾಲಿ ದಳ 5, ಬಿಜೆಪಿ ಮೈತ್ರಿಕೂಟ 2 ಹಾಗೂ ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮತದಾನೋತ್ತರ ಸಮೀಕ್ಷೆಗಳು ಹೇಳಿದಂತೆ ಪಂಜಾಬ್ನಲ್ಲಿ ಕಮಾಲ್ ಮಾಡಿರುವ ಎಎಪಿ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಅನ್ನು ಹಿಂದಿಕ್ಕುವ ಮೂಲಕ ಅಧಿಕಾರದ ಗದ್ದುಗೆಯತ್ತ ದಾಪುಗಾಲಿಟ್ಟಿದೆ.