ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದುರಂಹಕಾರವನ್ನು ಬಿಟ್ಟು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಡಿಕೆ ಮುಂದಿರಿಸಿದ್ದಾರೆ.
ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರತಿಭಟನೆ ನಡೆಸುತ್ತಿರುವ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ಕೇಂದ್ರ ಸರ್ಕಾರ ಮನಗಾಣಬೇಕಿದೆ ಎಂದು ಹೇಳಿದರು.
ರೈತರು ಅಕ್ಟೋಬರ್ನಲ್ಲಿ ಗಾಂಧಿ ಜಯಂತಿ ತನಕ ಅಂದೋಲನ ನಡೆಸುವುದಾಗಿ ತಿಳಿಸಿದ್ದಾರೆ. ಮೋದಿ ಸರ್ಕಾರದ ಮೇಲಿನ ನಂಬಿಕೆ ಸಂಪೂರ್ಣ ನಷ್ಟವಾಗಿದೆ ಎಂಬುದೇ ಇದರಿಂದಲೇ ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ:
ಗಾಂಧಿ ಜಯಂತಿ ವರೆಗೆ ಪ್ರತಿಭಟನೆ ಮುಂದುವರಿಸಲು ರೈತರು ದೃಢ ಸಂಕಲ್ಪ ಕೈಗೊಂಡಿದ್ದಾರೆ. ಇದು ಮೋದಿ ಸರ್ಕಾರದ ವಿರುದ್ಧ ರೈತರು ಎಷ್ಟು ಹತಾಶೆಗೊಂಡಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.
ಕಳೆದ ವರ್ಷ ನವೆಂಬರ್ 26ರಿಂದಲೇ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಇದುವರೆಗೆ ಬಿಕ್ಕಟ್ಟು ಇತ್ಯರ್ಥ್ಯಗೊಂಡಿಲ್ಲ.