ನವದೆಹಲಿ: ರಫೇಲ್ ಯುದ್ಧವಿಮಾನ ಖರೀದಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದು, ’ವ್ಯಕ್ತಿ ತಾನು ಮಾಡಿದ ಕರ್ಮಕ್ಕೆ ಪ್ರತಿಫಲವನ್ನು ಅನುಭವಿಸಲೇಬೇಕು. ಇದರಿಂದ ಯಾರೂ ಪಾರಾಗಲು ಸಾಧ್ಯ ಇಲ್ಲ’ ಎಂದು ಕುಟುಕಿದ್ದಾರೆ.
ರಫೇಲ್ ಯುದ್ಧ ವಿಮಾನ ತಯಾರಕ ಕಂಪನಿಯು ಮಧ್ಯವರ್ತಿಯೊಬ್ಬರಿಗೆ ₹ 9.51 ಕೋಟಿ (ಹತ್ತು ಲಕ್ಷ ಯುರೊ) ನೀಡಿದೆ ಎಂಬುದಾಗಿ ಫ್ರಾನ್ಸ್ನ ಮಾಧ್ಯಮವೊಂದು ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಹುಲ್ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ.
‘ರಫೇಲ್ ಯುದ್ಧವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸುತ್ತಲೇ ಇದ್ದಾರೆ. ಈಗ ಫ್ರಾನ್ಸ್ನ ಮಾಧ್ಯಮದಲ್ಲಿ ಈ ಬಗ್ಗೆ ವರದಿಯಾಗಿದ್ದು, ಇದು ರಾಹುಲ್ ಗಾಂಧಿ ಅವರ ಆರೋಪಗಳನ್ನು ಸಮರ್ಥಿಸುತ್ತದೆ’ ಎಂದು ಕಾಂಗ್ರೆಸ್ ಹೇಳಿದೆ.