ಶ್ರೀನಗರ: ಜಮ್ಮುವಿನ ರಿಯಾಸಿ ಜಿಲ್ಲೆಯ ತ್ರಿಕುಟಾ ಬೆಟ್ಟದಲ್ಲಿರುವ ಹೆಸರಾಂತ ಯಾತ್ರಾ ಸ್ಥಳ ವೈಷ್ಣೋದೇವಿ ಗುಹೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಲ್ನಡಿಗೆಯಲ್ಲಿ ಸಾಗಿದ್ದಾರೆ.
ಜಮ್ಮುವಿನ ಕಾತ್ರಾದಿಂದ 14 ಕಿ.ಮೀ ದೂರದಲ್ಲಿರುವ ವೈಷ್ಣೋದೇವಿ ಗುಹೆಗೆ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್ ಗಾಂಧಿ ಶುಕ್ರವಾರ ದೇವಿಯ ದರ್ಶನ ಪಡೆದಿದ್ದಾರೆ.
ಪ್ರಯಾಣದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಹುಲ್, 'ನಾನು ವೈಷ್ಣೋಮಾತೆಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದೇನೆ. ಈ ಸಮಯದಲ್ಲಿ ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ' ಎಂದು ತಿಳಿಸಿದ್ದಾರೆ.
ಯಾತ್ರಾರ್ಥಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಭದ್ರತಾ ಸಿಬ್ಬಂದಿ ರಾಹುಲ್ ಅವರಿಗೆ ಸಾಥ್ ನೀಡಿದರು.