ನವದೆಹಲಿ: ಕೋವಿಡ್ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಸತ್ತ ವ್ಯಕ್ತಿಯ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ ಸರ್ಕಾರ ನೀಡುವ ಪರಿಹಾರ, ಆ ಕುಟುಂಬಕ್ಕೆ ಸಣ್ಣದಾದ ನೆರವು ನೀಡುತ್ತದೆ‘ ಎಂದು ಹೇಳಿದ್ದಾರೆ.
‘ಕೋವಿಡ್ ಸೊಂಕಿನಿಂದ ಸಾವನ್ನಪ್ಪಿದ ಕುಟುಂಬದ ಸದಸ್ಯರಿಗೆ ₹4ಲಕ್ಷ ಪರಿಹಾರವನ್ನು ನೀಡಲು ಸಾಧ್ಯವಿಲ್ಲ‘ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ರೀತಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
‘ಸರ್ಕಾರ ನೀಡುವ ಪರಿಹಾರದಿಂದ ಮೃತರ ಕುಟುಂಬದವರಿಗೆ ಸಣ್ಣಮಟ್ಟಿನ ಸಹಾಯವಾಗುತ್ತದೆ. ಆದರೆ, ಸರ್ಕಾರ ಅದನ್ನೂ ಕೊಡಲು ಸಿದ್ಧವಿಲ್ಲ‘ ಎಂದು ರಾಹುಲ್ ಟೀಕಿಸಿದ್ದಾರೆ.
‘ಆರಂಭದಲ್ಲಿ, ಕೋವಿಡ್ ಸಾಂಕ್ರಾಮಿಕದಿಂದ ಬಳಲಿದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಲಿಲ್ಲ. ನಂತರ ಸಾಂಕ್ರಾಮಿಕ ರೋಗದ ಬಗ್ಗೆ ಸುಳ್ಳು ಅಂಕಿ ಅಂಶಗಳನ್ನು ನೀಡುವ ಮೂಲ ಸರ್ಕಾರ ಕ್ರೌರ್ಯವನ್ನು ಪ್ರದರ್ಶಿಸಿತು‘ ಎಂದು ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.