ಕೋಮುಗಲಭೆಗೆ ಪ್ರಚೋದನೆ ನೀಡಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಎಚ್ಚರಿಸಿದ್ದಾರೆ.
ಕರೌಲಿ ನಗರದಲ್ಲಿ ನಡೆದ ಕೋಮು ಘರ್ಷಣೆಯ ಕುರಿತು ಸುದ್ದಿಸಂಸ್ಥೆ ‘ಎಎನ್ಐ’ಗೆ ಪ್ರತಿಕ್ರಿಯಿಸಿರುವ ಅವರು, ಗಲಭೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
‘ಗಲಭೆಗೆ ಪ್ರಚೋದನೆ ನೀಡಿದವರನ್ನು ಸುಮ್ಮನೇ ಬಿಡುವುದಿಲ್ಲ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಾಗುವುದು’ ಎಂದು ಗೆಹಲೋತ್ ಹೇಳಿದ್ದಾರೆ.
ರಾಜಸ್ಥಾನದ ಕರೌಲಿಯಲ್ಲಿ, ಹಿಂದೂ ಹೊಸ ವರ್ಷಾಚರಣೆಯ ಅಂಗವಾಗಿ ನಡೆದ ಬೈಕ್ ರ್ಯಾಲಿ ವೇಳೆ ಎರಡು ಕೋಮುಗಳ ಮಧ್ಯೆ ಘರ್ಷಣೆ ಸಂಭವಿಸಿತ್ತು.
ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂಗಳ ಬೈಕ್ ರ್ಯಾಲಿ ಹಾದು ಹೋಗುವ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಇದರಿಂದ 42 ಜನರು ಗಾಯಗೊಂಡಿದ್ದರು. ಕೆಲವೆಡೆ ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.