ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ: ಮತ್ತೆ ಗರಿಗೆದರಿದ ನಾಯಕತ್ವ ಬದಲಾವಣೆ

ನಡ್ಡಾ ಭೇಟಿಯಾದ ಮುಖ್ಯಮಂತ್ರಿ ತೀರಥ್‌ ಸಿಂಗ್‌ ರಾವತ್‌
Last Updated 2 ಜುಲೈ 2021, 16:29 IST
ಅಕ್ಷರ ಗಾತ್ರ

ನವದೆಹಲಿ, ಡೆಹರಾಡೂನ್‌: ಉತ್ತರಾಖಂಡದಲ್ಲಿ ನಾಯಕತ್ವ ಬದಲಾವಣೆ ಕುರಿತ ಚಟುವಟಿಕೆಗಳು ಮತ್ತೆ ಆರಂಭವಾಗಿವೆ.

ಮುಖ್ಯಮಂತ್ರಿ ತೀರಥ್‌ ಸಿಂಗ್‌ ರಾವತ್‌ ಅವರು ಶುಕ್ರವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

ಪ್ರಸ್ತುತ ಲೋಕಸಭಾ ಸದಸ್ಯರಾಗಿರುವ ರಾವತ್‌, ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಬೇಕಾದರೆ ಸೆಪ್ಟೆಂಬರ್‌ 10ರ ಒಳಗೆ ಶಾಸಕರಾಗಿ ಆಯ್ಕೆಯಾಗಬೇಕಾಗಿದೆ.

ಆದರೆ, ಚುನಾವಣಾ ಆಯೋಗ ರಾಜ್ಯದಲ್ಲಿ ತೆರವಾಗಿರುವ ಎರಡು ಸ್ಥಾನಗಳಿಗೆ ಕೋವಿಡ್‌–19 ಕಾರಣಕ್ಕೆ ಉಪಚುನಾವಣೆ ನಡೆಸುವ ಸಾಧ್ಯತೆಗಳು ಕಡಿಮೆಯಾಗಿರುವುದರಿಂದ ನಾಯಕತ್ವ ಬದಲಾವಣೆ ಅನಿವಾರ್ಯ ಎನ್ನುವ ಪರಿಸ್ಥಿತಿ ಸೃಷ್ಟಿಯಾಗಿದೆ. ಉತ್ತರಾಖಂಡದ ಗಂಗೋತ್ರಿ ಮತ್ತು ಹಲ್ದವಾನಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಾಗಿದೆ.

ಪ್ರಸ್ತುತ ವಿಧಾನಸಭೆಯ ಅವಧಿ ಮುಂದಿನ ಮಾರ್ಚ್‌ನಲ್ಲಿ ಮುಕ್ತಾಯವಾಗುವುದರಿಂದ ಚುನಾವಣೆ ಆಯೋಗ ಉಪಚುನಾವಣೆ ನಡೆಸುವ ಸಾಧ್ಯತೆಗಳು ಕ್ಷೀಣಿಸಿವೆ. ಕೇವಲ 9 ತಿಂಗಳಿರುವಾಗ ಚುನಾವಣೆ ನಡೆಸುವುದಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಜತೆಗೆ, ಸಾಂಕ್ರಾಮಿಕ ಕಾಯಿಲೆ ಸಂದರ್ಭದಲ್ಲಿ ಈ ಹಿಂದೆ ಚುನಾವಣೆ ನಡೆಸಿದ ಕಾರಣಕ್ಕೆ ಆಯೋಗವನ್ನು ನ್ಯಾಯಾಲಯಗಳು ತರಾಟೆಗೆ ತೆಗೆದುಕೊಂಡಿವೆ. ಆದ್ದರಿಂದ, ಆಯೋಗವು ಚುನಾವಣೆ ನಡೆಸಲು ಅವಸರ ಮಾಡುವುದಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್‌ 151 ‘ಎ’ ಅನ್ವಯ ಸಂಸತ್‌ ಅಥವಾ ರಾಜ್ಯ ವಿಧಾನಸಭೆಗಳ ಖಾಲಿ ಉಳಿದಿರುವ ಸ್ಥಾನಗಳನ್ನು ಆರು ತಿಂಗಳ ಒಳಗೆ ಉಪಚುನಾವಣೆ ಮೂಲಕ ಭರ್ತಿ ಮಾಡಬೇಕು. ಆದರೆ, ಆಯ್ಕೆಯಾಗುವ ಹೊಸ ಸದಸ್ಯರ ಅವಧಿಯು ಒಂದು ವರ್ಷ ಅಥವಾ ಅದಕ್ಕೂ ಹೆಚ್ಚು ಇರಬೇಕು ಎಂದು ತಿಳಿಸಿದೆ.

ಕೇಂದ್ರ ಸರ್ಕಾರವು ಸಹ ಉಪಚುನಾವಣೆಗೆ ಒತ್ತಡ ಹೇರುವ ಸಾಧ್ಯತೆ ಕಡಿಮೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಉಪಚುನಾವಣೆ ನಡೆಯದಿದ್ದರೆ ನಾಯಕತ್ವ ಬದಲಾವಣೆ ಮಾಡುವುದು ಬಿಜೆಪಿಗೆ ಅನಿವಾರ್ಯವಾಗಲಿದೆ. ಈಗಿರುವ ಶಾಸಕರಲ್ಲಿ ಒಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ತ್ರಿವೇಂದ್ರ ಸಿಂಗ್‌ ರಾವತ್‌ ಅವರನ್ನು ಬದಲಾಯಿಸಿ ತೀರಥ್‌ ಸಿಂಗ್‌ ರಾವತ್‌ ಅವರನ್ನು ಕೇವಲ ನಾಲ್ಕು ತಿಂಗಳ ಹಿಂದೆ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT