ನವದೆಹಲಿ: ಇಂಧನ ಇಲಾಖೆಗೆ ಸಂಬಂಧಿಸಿದ ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದಾಗ ನಡೆದಿದ್ದ ಸೌರವಿದ್ಯುತ್ ಉತ್ಪಾದನಾ ಘಟಕಗಳ ಹಂಚಿಕೆ ಪ್ರಕ್ರಿಯೆ ಕುರಿತು ಕರ್ನಾಟಕದ ಬಿಜೆಪಿ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಲಿದೆ ಎಂಬ ಪತ್ರಿಕಾ ವರದಿಗೆ ಅವರು ಪ್ರತಿಕ್ರಿಯಿಸಿದರು.
‘ನ್ಯಾಯಾಂಗ ತನಿಖೆ ಯಾಕೆ?, ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಲಿ. ಎದುರಿಸಲು ನಾನು ಸಿದ್ಧನಿದ್ದೇನೆ’ ಎಂದು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಲು ದೆಹಲಿಗೆ ಬಂದಿರುವ ಶಿವಕುಮಾರ್ ಅವರು ಹೇಳಿದ್ದಾರೆ.
'ನಾನು ಇಂಧನ ಸಚಿವನಾಗಿದ್ದಾಗ ನವೀಕರಿಸಬಹುದಾದ ಇಂಧನ ವಲಯದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಈ ಯೋಜನೆಗಳು ಕೇಂದ್ರ ಸರ್ಕಾರದ ಪ್ರಶಂಸೆಗೂ ಪಾತ್ರವಾಗಿವೆ’ ಎಂದೂ ತಿಳಿಸಿದ್ದಾರೆ.
‘ಕರ್ನಾಟಕದ ಬಿಜೆಪಿ ಸರ್ಕಾರವು ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಹೇಗೆ ಭ್ರಷ್ಟಾಚಾರ ನಡೆಸಿದೆ ಎಂಬುದು ನಮಗೆ ತಿಳಿದಿದೆ. ಅದನ್ನು ಮುಚ್ಚಿ ಹಾಕಲು ಹಿಂದಿನ ಸರ್ಕಾರದ ಅವಧಿಯಲ್ಲಿ ಅನುಷ್ಠಾನಗೊಂಡಿರುವ ಯೋಜನೆಗಳ ತನಿಖೆ ನಡೆಸುತ್ತಿದೆ ಎಂದಿದ್ದಾರೆ.