ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆ ನಡುವೆ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶೇರ್-ಎ-ಕಾಶ್ಮೀರ ಕ್ರೀಡಾಂಗಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಿತು. ಲೆಫ್ಟಿನೆಂಟ್ ಗವರ್ನರ್ ಸಲಹೆಗಾರ ಬಸೀರ್ ಖಾನ್ ಅವರು ಧ್ವಜಾರೋಹಣ ನೇರವೇರಿಸಿ, ಗೌರವವಂದನೆ ಸ್ವೀಕರಿಸಿದರು.
‘ತೀವ್ರ ಚಳಿ ವಾತಾವರಣದ ನಡುವೆಯೂ ಗಣರಾಜೋತ್ಸವದ ಮೆರವಣಿಗೆಯನ್ನು ನಡೆಸಲಾಯಿತು. ಆದರೆ ಪಥಸಂಚಲನಕ್ಕೂ ಮುನ್ನ ಭದ್ರತಾ ಸಿಬ್ಬಂದಿಯೊಬ್ಬರಲ್ಲಿ ಆರೋಗ್ಯ ಏರುಪೇರಾಗಿದ್ದು, ಕುಸಿದು ಬಿದ್ದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
‘ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ’ ಎಂದು ಅವರು ಹೇಳಿದರು. ಗಣರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದು, ಶಾಂತಿಯುತವಾಗಿ ನಡೆಯಿತು.