ನವದೆಹಲಿ: ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರಳಿಸಿ ಬಳಿಕ ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜಮ್ಮು–ಕಾಶ್ಮೀರದ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಲು ಮುಂದಾಗಿರುವ ಬೆನ್ನಲ್ಲೇ ಕಾಂಗ್ರೆನಿಂದ ಈ ಆಗ್ರಹ ವ್ಯಕ್ತವಾಗಿದೆ.
‘ರಾಜ್ಯ ಸ್ಥಾನಮಾನ ಮರಳಿಸುವುದು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಹಕ್ಕುಗಳ ಸಂಪೂರ್ಣ ಮರು ಸ್ಥಾಪನೆಗೆ ಖಾತರಿ ನೀಡುವ ಏಕೈಕ ಮಾರ್ಗವಾಗಿದೆ’ ಎಂದು ಕಾಂಗ್ರೆಸ್ನ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.
ಜಮ್ಮು–ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂಬುದನ್ನು 2019ರ ಆಗಸ್ಟ್ 6ರಂದು ನಡೆದಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲೇ ಸ್ಪಷ್ಟವಾಗಿ ಹೇಳಲಾಗಿತ್ತು. ರಾಜ್ಯ ಸ್ಥಾನಮಾನವನ್ನು ರದ್ದುಗೊಳಿಸುವುದು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ತತ್ವಗಳ ಮೇಲಿನ ನೇರ ದಾಳಿ ಎಂಬುದಾಗಿ ನಾವು ಭಾವಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ದೆಹಲಿಯ ಆಡಳಿತದ ಬದಲು ಜಮ್ಮು–ಕಾಶ್ಮೀರದ ಜನರಿಗೆ ಅವರದ್ದೇ ಆದ ಪ್ರತಿನಿಧಿಗಳನ್ನು ಆಯ್ಕೆ ಮಾಡುವ, ಅವರದ್ದೇ ಆದ ವಿಧಾನಸಭೆಯನ್ನು ಹೊಂದುವ ಅವಕಾಶ ನೀಡಬೇಕು ಎಂದೂ ಸುರ್ಜೆವಾಲಾ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 24ರಂದು ಸಭೆ ನಡೆಸಲಿದ್ದು, ನಾಯಕರಿಗೆ ಈಗಾಗಲೇ ಆಹ್ವಾನ ಕಳುಹಿಸಲಾಗಿದೆ. ಈ ಮಧ್ಯೆ, ಸಭೆಯಲ್ಲಿ ಭಾಗವಹಿಸುವ ಕುರಿತು ತೀರ್ಮಾನ ತೆಗೆದುಕೊಳ್ಳುವ ಸಲುವಾಗಿ ಜಮ್ಮು–ಕಾಶ್ಮೀರದ ರಾಜಕೀಯ ಪಕ್ಷಗಳು ಸಮಾಲೋಚನೆಯಲ್ಲಿ ತೊಡಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.