ಚೆನ್ನೈ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮಿಳುನಾಡಿನಲ್ಲಿ ಪ್ರಚಾರ ನಡೆಸುವುದನ್ನು ನಿರ್ಬಂಧಿಸಬೇಕು ಎಂದು ತಮಿಳುನಾಡು ಬಿಜೆಪಿ ಘಟಕವು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಮಾರ್ಚ್ 1ರಂದು ಕನ್ಯಾಕುಮಾರಿ ಜಿಲ್ಲೆಯ ಮುಲಗುಮೂಡುವಿನ ಸೇಂಟ್ ಜೋಸೆಫ್ ಶಾಲೆಯಲ್ಲಿ ರಾಹುಲ್ ಗಾಂಧಿ ಅವರು ಪಾಲ್ಗೊಂಡ ಕಾರ್ಯಕ್ರಮವು ಚುನಾವಣಾ ಪ್ರಚಾರವನ್ನು ಹೋಲುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುಖಂಡ ವಿ. ಬಾಲಚಂದ್ರನ್ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 109 ಮತ್ತು 124 ಎ ಅಡಿಯಲ್ಲಿ ಅಪರಾಧ ಎಸಗಿದ್ದು ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದೂ ಮನವಿ ಮಾಡಿದ್ದಾರೆ. ‘ದೇಶದಲ್ಲಿ ಅಸಹನೆ ಹಾಗೂ ಭಯದ ವಾತಾವರಣವಿದೆ. ನಾವು ಇದರ ವಿರುದ್ಧ ಹೋರಾಡಬೇಕು. ಮತ್ತೊಮ್ಮೆ ಭಾರತದಲ್ಲಿ ಸಂತುಷ್ಟ, ಆರಾಮದಾಯಕ ಹಾಗೂ ನಿರ್ಭೀತ ವಾತಾವರಣ ಸೃಷ್ಟಿಸಬೇಕಿದೆ’ ಎಂದು ರಾಹುಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.
ಕಾನೂನಿನಿಂದ ಸ್ಥಾಪಿಸಲ್ಪಟ್ಟ ಸರ್ಕಾರದ ಬಗ್ಗೆ ದ್ವೇಷ, ತಿರಸ್ಕಾರ ಮತ್ತು ಅಸಮಾಧಾನವನ್ನು ಉಂಟುಮಾಡುವ ಉದ್ದೇಶದಿಂದ ನೀಡಿದ ಹೇಳಿಕೆಯು ಯುವಕರನ್ನು ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಪ್ರಚೋದಿಸುತ್ತದೆ ಎಂದು ಬಿಜೆಪಿ ನಾಯಕರು ವಾದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.