ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆಗೆ ಮುಂದಿನ ವರ್ಷ ನಡೆಯುವ ಚುನಾವಣೆಗೆ ನಿವೃತ್ತ ಸೇನಾಧಿಕಾರಿ ಅಜಯ್ ಕೊತಿಯಾಲ್ ಅವರನ್ನು ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ತಿಳಿಸಿದ್ದಾರೆ.
‘ಉತ್ತರಾಖಂಡದ ನಾಗರಿಕರು ರಾಜಕಾರಣಿಗಳ ಆಡಳಿತದಿಂದ ಬೇಸರಗೊಂಡಿದ್ದಾರೆ. ಹಾಗಾಗಿ ಜನರ ಸಲಹೆ ಮೇರೆಗೆ ಕೊತಿಯಾಲ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ’ ಎಂದು ಅವರು ತಿಳಿಸಿದರು.
‘ರಾಜ್ಯವನ್ನು ಲೂಟಿ ಮಾಡುವ ರಾಜಕಾರಣಿಗಳಿಂದ ಇಲ್ಲಿನ ಜನರು ಬೇಸತ್ತಿದ್ದಾರೆ. ಹಾಗಾಗಿ ತನ್ನ ಬೊಕ್ಕಸವನ್ನು ತುಂಬಿಸದೇ ಜನರ ಸೇವೆ ಮಾಡುವ ಸೇನಾಧಿಕಾರಿಯನ್ನು ಮುಖ್ಯಮಂತ್ರಿಯಾಗಿ ನೋಡಲು ಇಚ್ಛಿಸಿದ್ದಾರೆ’ ಅವರು ಹೇಳಿದರು.
‘ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ, ಕೊತಿಯಾಲ್ ಅವರ ನೇತೃತ್ವದಲ್ಲಿ ಉತ್ತರಾಖಂಡವನ್ನು ಜಾಗತಿಕ ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಮಾಡುತ್ತೇವೆ. ಜತೆಗೆ, ರಾಜ್ಯದ ಯುವಕರಿಗಾಗಿ ಉದ್ಯೋಗಾವಕಾಶ ಸೃಷ್ಟಿಸುತ್ತೇವೆ’ ಎಂದು ಅವರು ಭರವಸೆ ನೀಡಿದರು.