ನವದೆಹಲಿ: ಕೋವಿಡ್ 19 ಮತ್ತು ಇನ್ಪ್ಲೂಯೆಂಜಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಏಪ್ರಿಲ್ 10 ಮತ್ತು 11ರಂದು ದೇಶದಾದ್ಯಂತ ಆಸ್ಪತ್ರೆಗಳಲ್ಲಿ ಸಿದ್ಧತಾ ಅಭಿಯಾನ ಹಮ್ಮಿಕೊಳ್ಳಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.
ಎಲ್ಲಾ ಜಿಲ್ಲೆಗಳ ಖಾಸಗಿ ಮತ್ತು ಸಾರ್ವಜನಿಕ ಆರೋಗ್ಯ ಸೌಲಭ್ಯಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ಐಸಿಎಂಆರ್) ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.
ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆ, ಆಮ್ಲಜನಕ ಮತ್ತು ಔಷಧಿಗಳ ದಾಸ್ತಾನು ಸಮರ್ಪಕವಾಗಿವೆಯೇ ಎಂಬುದನ್ನು ಪರಿಶೀಲಿಸುವುದು ಈ ಅಭಿಯಾನದ ಉದ್ದೇಶ ಎಂದೂ ಹೇಳಿದೆ.
ಮಾರ್ಚ್ 27ರಂದು ವರ್ಚುವಲ್ ಸಭೆಯ ಮೂಲಕ ಅಭಿಯಾನದ ಮಾಹಿತಿಯನ್ನು ರಾಜ್ಯಗಳಿಗೆ ನೀಡಲಾಗುವುದು ಎಂದೂ ತಿಳಿಸಿದೆ.
ಭಯ ಬೇಡ, ಬೂಸ್ಟರ್ ಡೋಸ್ ಪಡೆದುಕೊಳ್ಳಿ:
ದೆಹಲಿಯಲ್ಲಿ ಈಚೆಗೆ ಕೋವಿಡ್ ಪ್ರಕರಣಗಳು ಹೆಚ್ಚಾಗಲು ಎಕ್ಸ್ಬಿಬಿ.1.16 ತಳಿ ಕಾರಣ ಎಂದಿರುವ ತಜ್ಞರು, ಜನರು ಭಯಪಡುವ ಅಗತ್ಯವಿಲ್ಲ, ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಇದುವರೆಗೆ ಪಡೆದುಕೊಳ್ಳದವರು ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಒಂದೇ ದಿನ 1,590 ಪ್ರಕರಣಗಳು ದೃಢ
146 ದಿನಗಳ ಬಳಿಕ ದೇಶದಲ್ಲಿ ಒಂದೇ ದಿನ 1,590 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,601ಕ್ಕೆ ಏರಿಕೆಯಾಗಿದೆ.
ಕೋವಿಡ್ನಿಂದಾಗಿ ಮತ್ತೆ ಆರು ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 5,30,824ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಮೂವರು, ಕರ್ನಾಟಕ, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದೂ ವಿವರಿಸಿದೆ.
ಇದನ್ನೂ ಓದಿ..
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.