ನವದೆಹಲಿ: ಸೌದಿ ಅರೇಬಿಯಾದಲ್ಲಿ ಸಾವಿಗೀಡಾದ ಹಿಂದೂ ವ್ಯಕ್ತಿಯೊಬ್ಬರನ್ನು ಮುಸ್ಲಿಂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ಸರ್ಕಾರ ಸಮಾಧಿಯನ್ನು ಪತ್ತೆ ಮಾಡಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.
ಜತೆಗೆ, ಅಸ್ಥಿಗಳನ್ನು ಹೊರತೆಗೆದು ಭಾರತಕ್ಕೆ ತರುವ ಬಗ್ಗೆ ಪರಿಶೀಲಿಸಲಾಗುತ್ತಿದೆ.ಈ ಬಗ್ಗೆ ಜೆಡ್ಡಾದಲ್ಲಿರುವ ಭಾರತದ ಕಾನ್ಸುಲೇಟ್ ಕಚೇರಿಯ ಅಧಿಕಾರಿಗಳು ಕಾನೂನು ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ಜೆಡ್ಡಾದಲ್ಲಿರುವ ಭಾರತದ ಕಾನ್ಸುಲೇಟ್ನ ಅಧಿಕಾರಿಗಳು ಮರಣ ಪ್ರಮಾಣ ಪತ್ರದಲ್ಲಿ ವ್ಯಕ್ತಿಯ ಧರ್ಮವನ್ನು ಮುಸ್ಲಿಂ ಎಂದು ತಪ್ಪಾಗಿ ನಮೂದಿಸಿದ್ದರು. ತಪ್ಪು ಅನುವಾದವೇ ಇದಕ್ಕೆ ಕಾರಣವಾಗಿತ್ತು. ಹೀಗಾಗಿ, ಅಂತ್ಯಕ್ರಿಯೆಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಲಾಗಿತ್ತು.
ಸಂಜೀವ್ಕುಮಾರ್ ಎಂಬುವವರು ಜನವರಿ 24ರಂದು ಹೃದಯಾಘಾತದಿಂದ ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದರು.
ತನ್ನ ಪತಿಯ ಅಸ್ಥಿಗಳನ್ನು ಹೊರತೆಗೆದು ಒಪ್ಪಿಸಲು ಕ್ರಮ ಕೈಗೊಳ್ಳುವಂತೆ ವಿದೇಶಾಂಗ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಂಜೀವ್ ಕುಮಾರ್ ಅವರ ಪತ್ನಿ ಅಂಜು ಶರ್ಮಾ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.