ನವದೆಹಲಿ: ಬೆಂಗಳೂರಿನ ಐಟಿ ಕಂಪನಿಯೊಂದರ ಉದ್ಯೋಗಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಹಾಗೂ ರಾಜೇಶ್ ಬಿಂದಲ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ, ‘ಆರೋಪಿಯು 30 ವರ್ಷಗಳ ಸೆರೆವಾಸ ಪೂರ್ಣಗೊಳಿಸುವವರೆಗೂ ಆತನನ್ನು ಜೈಲಿನಿಂದ ಬಿಡುಗಡೆ ಮಾಡುವಂತಿಲ್ಲ’ ಎಂದೂ ಆದೇಶಿಸಿದೆ.
ಬದುಕಿರುವವರೆಗೂ ಆರೋಪಿಯು ಜೈಲಿನಲ್ಲೇ ಕಳೆಯಬೇಕು ಎಂದು ವಿಚಾರಣಾಧೀನ ನ್ಯಾಯಾಲಯ ತೀರ್ಪು ನೀಡಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದರ ವಿರುದ್ಧ ಆರೋಪಿ ಶಿವಕುಮಾರ ಅಲಿಯಾಸ್ ಶಿವ ಅಲಿಯಾಸ್ ಶಿವಮೂರ್ತಿ ಎಂಬಾತ ಮೇಲ್ಮನವಿ ಸಲ್ಲಿಸಿದ್ದ.
‘ಪ್ರತಿಷ್ಠಿತ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡಿ ಕೈತುಂಬಾ ಸಂಬಳ ಪಡೆಯುತ್ತಿದ್ದ ವಿವಾಹಿತ ಮಹಿಳೆಯು ಸುಂದರ ಬದುಕು ಕಟ್ಟಿಕೊಂಡಿದ್ದರು. ಆರೋಪಿಯ ದುಷ್ಕೃತ್ಯದಿಂದಾಗಿ 28ನೇ ವಯಸ್ಸಿನಲ್ಲೇ ಆಕೆಯ ಜೀವನ ಅಂತ್ಯಗೊಂಡಿದೆ’ ಎಂದು ಹೇಳಿದ ನ್ಯಾಯಪೀಠವು ವಿಚಾರಣಾಧೀನ ನ್ಯಾಯಾಲಯದ ತೀರ್ಪನ್ನು ಪರಿಷ್ಕರಿಸಿದೆ.
‘ಬೆಂಗಳೂರು ನಗರವು ದೇಶದ ‘ಸಿಲಿಕಾನ್ ವ್ಯಾಲಿ’ ಎಂದೇ ಗುರುತಿಸಿಕೊಂಡಿದೆ. ಇಂತಹ ಮಹಾನಗರಗಳಲ್ಲಿ ಪ್ರತಿಷ್ಠಿತ ಐಟಿ ಕಂಪನಿಗಳು ತಲೆ ಎತ್ತಿದ್ದು, ಅವುಗಳಲ್ಲಿ ಮಹಿಳಾ ಸಿಬ್ಬಂದಿಯೇ ಅಧಿಕ ಸಂಖ್ಯೆಯಲ್ಲಿ ಕೆಲಸಕ್ಕಿದ್ದಾರೆ. ಈ ಕಂಪನಿಗಳು ವಿದೇಶಗಳಲ್ಲೂ ಗ್ರಾಹಕರನ್ನು ಹೊಂದಿರುವುದರಿಂದಾಗಿ ಸಿಬ್ಬಂದಿಯು ರಾತ್ರಿ ಪಾಳಿಯಲ್ಲೂ ಕೆಲಸ ಮಾಡಬೇಕಿದೆ. ಇಂತಹ ಕಂಪನಿಗಳಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಯ ಸುರಕ್ಷತೆ ಹಾಗೂ ಭದ್ರತೆ ಮುಖ್ಯವಾಗುತ್ತದೆ’ ಎಂದು ನ್ಯಾಯಮೂರ್ತಿ ಓಕಾ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.
ಕ್ಯಾಬ್ ಚಾಲಕನಾಗಿದ್ದ ಆರೋಪಿಯು ಸಂತ್ರಸ್ತೆಯನ್ನು ಮನೆಗೆ ಬಿಡಲು ಹೋಗಿದ್ದ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.