ನವದೆಹಲಿ: 48 ಗಂಟೆಗಳ ಕಾಲ ಸೆರೆವಾಸ ಅನುಭವಿಸಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್, ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಹಾಗೂ ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠವು, ‘ಅಧಿಕಾರ ವಿಭಜನೆ ತತ್ವದ ದೃಷ್ಟಿಯಿಂದ ಈ ವಿಚಾರದಲ್ಲಿ ನ್ಯಾಯಾಲಯವು ಯಾವುದೇ ಬಗೆಯ ನಿರ್ದೇಶನ ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿತು.
‘ಸಚಿವರು ಜನಸೇವಕರಷ್ಟೇ ಅಲ್ಲ. ಶಾಸಕರು ಕೂಡ ಆಗಿರುತ್ತಾರೆ. ಅಂತಹವರು ಕನಿಷ್ಠ ಎರಡು ದಿನ ನ್ಯಾಯಾಂಗ ಬಂಧನದಲ್ಲಿದ್ದರೆ ಅವರನ್ನು ತಾತ್ಕಾಲಿಕವಾಗಿ ಸಚಿವ ಸ್ಥಾನದಿಂದ ಉಚ್ಚಾಟಿಸಬೇಕು’ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅರ್ಜಿಯಲ್ಲಿ ತಿಳಿಸಿದ್ದರು.