ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳಿಗೆ ‘ನೀಟ್’ ಮೂಲಕ ಪ್ರವೇಶ ಕಲ್ಪಿಸುವ ಸೀಟುಗಳಿಗೆ ಇತರೆ ಹಿಂದುಳಿದ ವರ್ಗಗಳಿಗೆ ಶೇ 27, ಇಡಬ್ಲ್ಯೂಎಸ್ಗೆ ಶೇ 10ರಷ್ಟು ಮೀಸಲಾತಿಯನ್ನು ನೀಡುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.
ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಬಿ.ವಿ.ನಾಗರತ್ನ ಅವರಿದ್ದ ಪೀಠವು, ಈ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ಕೇಂದ್ರ ಸರ್ಕಾರ, ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ, ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸೂಚಿಸಿತು.
ಮಧುರಾ ಕವಿಶ್ವರ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ಈಗಾಗಲೇ ನೀಲ್ ಔರೆಲಿಯೊ ನ್ಯೂನ್ಸ್ ಮತ್ತು ಇತರೆ 26 ಮಂದಿಯ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸಲು ನಿರ್ಧರಿಸಿದೆ. ಅದರ ಜೊತೆಗೆ ಇದನ್ನು ಪರಿಗಣಿಸಲಾಗುವುದು ಎಂದು ತಿಳಿಸಿತು.