ನವದೆಹಲಿ: ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸಂಬಂಧಿಸಿ ಜಾತಿ ಆಧಾರಿತ ಗಣತಿ ನಡೆಸುವಂತೆ ನಿರ್ದೇಶಿಸಲು ಕೋರಿದ ಅರ್ಜಿ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರನ್ನು ಒಳಗೊಂಡ ನ್ಯಾಯಪೀಠ, ಈ ಸಂಬಂಧ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೂ ನೋಟಿಸ್ ಜಾರಿ ಮಾಡಿತು.
ವಕೀಲ ಕ್ರಿಶನ್ ಕನ್ಹಯ್ಯ ಪಾಲ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.
ಒಬಿಸಿಗಳಿಗೆ ಸಂಬಂಧಿಸಿ ಜಾತಿ ಆಧಾರಿತ ಗಣತಿ ನಡೆದಿಲ್ಲ. ಹಾಗಾಗಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಯೋಜನೆಗಳಿಂದಾಗುವ ಪ್ರಯೋಜನಗಳ ಕುರಿತು ಎಲ್ಲ ವರ್ಗಗಳಿಗೆ ತಿಳಿಸಲು ಸರ್ಕಾರಗಳಿಗೆ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕಾಗಿ ಜಾತಿ ಆಧಾರಿತ ಗಣತಿ ನಡೆಸಬೇಕು ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.