ನವದೆಹಲಿ: ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿರುವ ವೈಎಸ್ಆರ್ ಕಾಂಗ್ರೆಸ್ನ ಬಂಡಾಯ ಸಂಸದ ಕೆ. ರಘು ರಾಮಕೃಷ್ಣ ರಾಜು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ತೆಲಂಗಾಣದ ಸಿಕಂದರಾಬಾದ್ನ ಸೇನಾ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ರಜಾಕಾಲದ ಪೀಠವು ರಾಜು ಅವರನ್ನು ಮುಂದಿನ ಆದೇಶದವರೆಗೆ ಸಿಕಂದರಾಬಾದ್ನ ಸೇನಾ ಆಸ್ಪತ್ರೆಯಲ್ಲಿರಿಸಬೇಕೆಂದು ನಿರ್ದೇಶನ ನೀಡಿದೆ.
ತೆಲಂಗಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯವರಿಂದ ನೇಮಕವಾಗಿರುವ ನ್ಯಾಯಾಂಗ ಅಧಿಕಾರಿಯ ಸಮ್ಮುಖದಲ್ಲೇ ರಾಜು ಅವರ ವೈದ್ಯಕೀಯ ಪರೀಕ್ಷೆ ನಡೆಯಬೇಕೆಂದೂ ನ್ಯಾಯಪೀಠವು ಆದೇಶಿಸಿದೆ.
ಸೇನಾ ಆಸ್ಪತ್ರೆಯ ಮುಖ್ಯಸ್ಥರ ನೇತೃತ್ವದಲ್ಲಿ ಮೂವರು ವೈದ್ಯರ ಮಂಡಳಿಯು ರಾಜು ಅವರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಿದೆ. ವೈದ್ಯಕೀಯ ಪರೀಕ್ಷೆಯ ವಿಡಿಯೊ ಚಿತ್ರೀಕರಣ ಮಾಡಿ ಅದರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ತಲುಪಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ.
ದೆಹಲಿ ಹೈಕೋರ್ಟ್ ನಿರ್ದೇಶನದಂತೆ ರಾಜು ಅವರಿಗೆ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ತಮಗೆ ವೈ ಶ್ರೇಣಿಯ ಭದ್ರತೆ ಒದಗಿಸಬೇಕೆಂದು ಕೋರಿ ರಾಜು ಅವರು ಕಳೆದ ವರ್ಷ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.