ನವದೆಹಲಿ: ಕೋಲ್ಕತ್ತದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಕೇಂದ್ರ ಪೊಲೀಸ್ ಪಡೆಗಳ ನಿಯೋಜನೆ ಮತ್ತು ಸಮಗ್ರ ಕ್ರಿಯಾ ಯೋಜನೆಯೊಂದನ್ನು ರೂಪಿಸಲು ಪಶ್ಚಿಮ ಬಂಗಾಳ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಮತ್ತು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದ ಬಿಜೆಪಿಯ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಈ ಅರ್ಜಿಯನ್ನು ಹಿಂಪಡೆದು ಕೋಲ್ಕತ್ತ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರನ್ನೊಳಗೊಂಡ ಪೀಠವೊಂದು ಸೂಚಿಸಿತು.
ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಪರ ಹಾಜರಾಗಿದ್ದ ಹಿರಿಯ ವಕೀಲ ಮನಿಂದರ್ ಸಿಂಗ್, ಇದೇ 19ರಂದು ನಡೆಯುವ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಅವರಿಗೆ ಬೆದರಿಕೆ ಒಡ್ಡಲಾಗುತ್ತಿದೆ. ಈ ಬಗ್ಗೆ ದೂರು ನೀಡಿದ್ದರೂ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಹೇಳಿದರು.
‘ನಾವು ಇದರ ವಿಚಾರಣೆ ಆರಂಭಿಸಿದರೆ ಇದು ಮುಗಿಯುವ ಸಾಧ್ಯತೆ ಇಲ್ಲ’ ಎಂದು ಅಭಿಪ್ರಾಯಪಟ್ಟ ಪೀಠ ಅರ್ಜಿಯನ್ನು ತಿರಸ್ಕರಿಸಿ ಕೋಲ್ಕತ್ತ ಹೈಕೋರ್ಟ್ಗೆ ತೆರಳಲು ಸೂಚಿಸಿತು.