ನವದೆಹಲಿ: ಅಕ್ಟೋಬರ್ 4ರಂದು ನಿಗದಿಯಾಗಿರುವ ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
2020 ಮತ್ತು 2021ರ ಯುಪಿಎಸ್ಸಿ ಪರೀಕ್ಷೆಗಳನ್ನು ಒಟ್ಟಿಗೆ ನಡೆಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನೂ ಸಹ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠವು, ಕೋವಿಡ್ಗೆ ಸಂಬಂಧಿಸಿದಂತೆ ಕೇಂದ್ರ ನಾಗರಿಕ ಸೇವಾ ಆಯೋಗವು (ಯುಪಿಎಸ್ಸಿ) ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಗಾಗಿ, ಅ. 4ರಂದು ಪರೀಕ್ಷೆ ನಡೆಸಬಹುದು ಎಂದು ಹೇಳಿದೆ.
ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೆ ಯುಪಿಎಸ್ಸಿ ಪ್ರತ್ಯೇಕ ವ್ಯವಸ್ಥೆ ಮಾಡಿರುವ ಬಗ್ಗೆಯೂ ಕೋರ್ಟ್ ಗಮನ ಸೆಳೆಯಿತು. ಕೊರೊನಾ ಸೋಂಕಿನ ಕಾರಣಕ್ಕಾಗಿ ಪರೀಕ್ಷೆಯಿಂದ ವಂಚಿತರಾಗುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಕೋರ್ಟ್, ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಕೋವಿಡ್–19 ಹಾಗೂ ಪ್ರವಾಹದ ಕಾರಣಕ್ಕಾಗಿ ಎರಡು–ಮೂರು ತಿಂಗಳ ಕಾಲ ನಾಗರಿಕ ಸೇವಾ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಕೆಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.
ಕೋವಿಡ್ ಕಾರಣಕ್ಕಾಗಿ ಅಭ್ಯರ್ಥಿಗಳು ಸರಿಯಾದ ಕೋಚಿಂಗ್ ಹಾಗೂ ಇತರ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಿಲ್ಲ ಎನ್ನುವ ಅರ್ಜಿದಾರರ ವಾದಕ್ಕೆ, ನ್ಯಾಯಪೀಠವು ಅಧ್ಯಯನಕ್ಕೆ ಸಂಬಂಧಿಸಿದಂತೆ ಸಾಮಗ್ರಿಗಳು ಆನ್ಲೈನ್ನಲ್ಲಿ ಲಭ್ಯವಿರುವ ಬಗ್ಗೆ ಉಲ್ಲೇಖಿಸಿತು.
ಈ ಬಾರಿ ಒಟ್ಟು 72 ಪರೀಕ್ಷಾ ಕೇಂದ್ರಗಳಲ್ಲಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು, 6 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.