ನವದೆಹಲಿ: ಭಾನುವಾರ (ಮೇ 2) ನಡೆಯಲಿರುವ ಉತ್ತರ ಪ್ರದೇಶದ ಪಂಚಾಯ್ತಿ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಶನಿವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ನ್ಯಾಯಪೀಠ, ಈ ಕುರಿತ ಅರ್ಜಿಯ ತುರ್ತು ವಿಚಾರಣೆಯನ್ನು ‘ನ್ಯಾಯಾಲಯದ ರಜಾ’ ದಿನದಂದು ನಡೆಸಿತು.
829 ಮತ ಎಣಿಕೆ ಕೇಂದ್ರಗಳಲ್ಲಿ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಕೋವಿಡ್– 19 ಮಾರ್ಗಸೂಚಿಗಳ ಅನ್ವಯ ಎಣಿಕೆ ಕಾರ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಸಂಬಂಧ ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪರಿಶೀಲಿಸಿದ ನಂತರ ನ್ಯಾಯಪೀಠ ಈ ತೀರ್ಪುನೀಡಿತು.
‘ಮಂಗಳವಾರ ಮುಂಜಾನೆವರೆಗೂ ಮತ ಎಣಿಕೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದಾದ್ಯಂತ ಕಟ್ಟು ನಿಟ್ಟಿನ ಕರ್ಪ್ಯೂ ಜಾರಿಯಲ್ಲಿರುತ್ತದೆ. ಹಾಗೆಯೇ, ಯಾವುದೇ ವಿಜಯೋತ್ಸವ, ರ್ಯಾಲಿಗಳಿಗೂ ಅನಮತಿ ನೀಡುವುದಿಲ್ಲ’ ಎಂದು ನ್ಯಾಯಪೀಠ ಹೇಳಿತು.
ಇದೇ ವೇಳೆ ಮತ ಎಣಿಕೆ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ಕುರಿತು ಗೆಜೆಟೆಡ್ ಅಧಿಕಾರಿಗಳಿಗೆ ಸೂಚಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಪೀಠ ಸೂಚಿಸಿತು.
ಮತ ಎಣಿಕೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಅರ್ಜಿಗಳ ವಿಚಾರಣೆಯನ್ನು ಮುಕ್ತಾಯಗೊಳಿಸುವವರೆಗೆ ರಾಜ್ಯದ ಮತ ಎಣಿಕೆ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸುವಂತೆಯೂ ನ್ಯಾಯಪೀಠ ನಿರ್ದೇಶನ ನೀಡಿದೆ.