ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ರಾಂಪುರ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ‘ಕಿರುಕುಳ’ ಆರೋಪದ ಪ್ರಕರಣಗಳನ್ನು ಉತ್ತರ ಪ್ರದೇಶದ ಹೊರಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಎ.ನಜೀರ್ ಮತ್ತು ಪಿ.ಎಸ್.ನರಸಿಂಹ ಅವರ ಪೀಠವು ಖಾನ್ ವಿರುದ್ಧ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣಗಳನ್ನು ವರ್ಗಾಯಿಸಲು ಸೂಕ್ತ ಕಾರಣ ಅಗತ್ಯವಿದೆ ಎಂದು ಹೇಳಿದೆ.
‘ರಾಜ್ಯದಲ್ಲಿ ನನಗೆ ನ್ಯಾಯ ಸಿಗುವುದಿಲ್ಲ. ಕಿರುಕುಳ ನೀಡಲಾಗುತ್ತಿದೆ. ರಾಜ್ಯದೊಳಗೆ ಪರಿಸ್ಥಿತಿ ಇದೇ ರೀತಿ ಇದೆ’ ಎಂದು ಖಾನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದರು.
‘ಪ್ರಕರಣದ ವರ್ಗಾವಣೆಗೆ ಬಲವಾದ ಕಾರಣಗಳ ಅಗತ್ಯವಿದೆ. ಅಲಹಾಬಾದ್ ಹೈಕೋರ್ಟ್ ಸಂಪರ್ಕಿಸುವ ಸ್ವಾತಂತ್ರ್ಯವನ್ನು ನೀಡುತ್ತಿದ್ದೇವೆ’ ಎಂದು ನ್ಯಾಯಪೀಠ ಹೇಳಿದೆ.
ದ್ವೇಷ ಭಾಷಣಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ಖಾನ್ ಅವರು ಅಪರಾಧಿ ಎಂದು ಈಚೆಗೆ ನ್ಯಾಯಾಲಯ ಆದೇಶಿಸಿದ್ದು, ಹೀಗಾಗಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.