ನವದೆಹಲಿ: ಭೀಮಾ–ಕೋರೆಗಾಂವ್ ಪ್ರಕರಣದಲ್ಲಿ ಜಾಮೀನು ಕೋರಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ತನ್ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿತು.
ಗೌತಮ್ ಪರ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಎನ್ಐಎ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರ ವಾದ–ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠವು, ತನ್ನ ತೀರ್ಪನ್ನು ಕಾಯ್ದಿರಿಸಿರುವುದಾಗಿ ತಿಳಿಸಿತು.
‘ಜಾಮೀನು ನೀಡಲು ಗೌತಮ್ ಅವರ ಅಕ್ರಮ ಬಂಧನದ 90 ದಿನಗಳ ಕಸ್ಟಡಿ ಅವಧಿಯನ್ನು ಲೆಕ್ಕ ಹಾಕಲು ಗಣನೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ಫೆ. 8ರಂದು ಬಾಂಬೆ ಹೈಕೋರ್ಟ್ ಗೌತಮ್ ಅವರ ಮನವಿಯನ್ನು ತಿರಸ್ಕರಿಸಿತ್ತು.
‘ಎನ್ಐಎ ನಿಗದಿತ 90 ದಿನಗಳ ಅವಧಿಯೊಳಗೆ ತಮ್ಮ ವಿರುದ್ಧ ಚಾರ್ಚ್ಶೀಟ್ ಸಲ್ಲಿಸಲು ವಿಫಲವಾಗಿದೆ’ ಎಂದು ಕಾರಣ ನೀಡಿ ಗೌತಮ್ ಸುಪ್ರೀಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.