ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಕೊಡುವಿರಾ?: ಸುಪ್ರೀಂ

ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ ನ್ಯಾಯಾಲಯ
Last Updated 24 ಮೇ 2021, 10:19 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ₹4 ಲಕ್ಷ ಪರಿಹಾರ ನೀಡುವ ವಿಚಾರವಾಗಿ ಸಲ್ಲಿಕೆಯಾದ ಅರ್ಜಿಯ ಕುರಿತು ಪ್ರತಿಕ್ರಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೋಮವಾರ ತಿಳಿಸಿದೆ. ಜತೆಗೆ, ಮೃತರಿಗೆ ಮರಣ ಪ್ರಮಾಣ ಪತ್ರವನ್ನು ನೀಡುವ ಪ್ರಕ್ರಿಯೆಗೆ ಏಕರೂಪದ ನೀತಿಯನ್ನು ಪ್ರಕಟಿಸುವಂತೆಯೂ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಮರಣ ಪ್ರಮಾಣ ಪತ್ರ ವಿತರಿಸುವ ಸಂದರ್ಭ ಐಸಿಎಂಆರ್‌ ಸೂಚನೆಗಳನ್ನು ಪಾಲಿಸಬೇಕು. ಪ್ರಮಾಣಪತ್ರಗಳನ್ನು ಒದಗಿಸುವ ಸಂದರ್ಭ ಏಕರೂಪದ ನೀತಿಯನ್ನು ಅನುಸರಿಸಬೇಕು ಎಂದು ನ್ಯಾ. ಅಶೋಕ್ ಭೂಷಣ್ ಮತ್ತು ನ್ಯಾ. ಎಂ ಆರ್‌ ಶಾ ಒಳಗೊಂಡ ಪೀಠ ಹೇಳಿದೆ.

ಕೊರೊನಾ ವೈರಸ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ವಿಕೋಪ ನಿರ್ವಹಣೆ ನೀತಿ, 2005ರ ಅಡಿ ಕೇಂದ್ರ ಮತ್ತು ರಾಜ್ಯ ಸರಕಾರ ₹4 ಲಕ್ಷ ಪರಿಹಾರವನ್ನು ಒದಗಿಸಬೇಕು ಮತ್ತು ಮರಣ ಪ್ರಮಾಣ ಪತ್ರ ಒದಗಿಸುವ ವೇಳೆ ಏಕನೀತಿಯನ್ನು ಅನುಸರಿಸಬೇಕು ಎಂದು ಕೋರಿ ಸಲ್ಲಿಕೆಯಾದ ಎರಡು ಪ್ರತ್ಯೇಕ ಅರ್ಜಿಗಳಿಗೆ ಸಂಬಂಧಿಸಿ ಕೇಂದ್ರ ಸರಕಾರ ಪ್ರತಿಕ್ರಿಯೆ ನೀಡಬೇಕು. ಒಂದು ವೇಳೆ ಸರಕಾರ ಪರಿಹಾರ ಒದಗಿಸಿದರೂ, ಏಕರೂಪ ನೀತಿ ಇಲ್ಲದಿದ್ದರೆ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಪರಿಹಾರ ಮೊತ್ತವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

'ಈ ಸಂದರ್ಭ ಕೊರೊನಾ ವೈರಸ್‌ಗೆ ಸಂಬಂಧಿಸಿದ ರೋಗಗಳಲ್ಲದೆ ಬೇರೆ ಕಾರಣಗಳಿಂದ ಹಲವು ಸಾವುಗಳು ಸಂಭವಿಸುತ್ತಿವೆ. ಹಾಗಾಗಿ ಮರಣ ಪ್ರಮಾಣ ಪತ್ರ ನೀಡಲು ಅನುಸರಿಸುತ್ತಿರುವ ಕ್ರಮವೇನು? ರಾಜ್ಯ ಸರಕಾರಗಳ ಅಧಿಕಾರಿಗಳು ಐಸಿಎಂಆರ್ ಸೂಚನೆಗಳನ್ನು ಅನುಸರಿಸುತ್ತಿರುವುದಾಗಿ ಹೇಳುತ್ತಿದ್ದಾರೆ. ಹಾಗಾಗಿ ಕೇಂದ್ರ ಸರಕಾರವು ಐಸಿಎಂಆರ್ ಸೂಚನೆಗಳ ಪಟ್ಟಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು. ಕೋವಿಡ್ ಪೀಡಿತರ ಸಾವಿನ ಪ್ರಮಾಣ ಪತ್ರ ನೀಡಲು ಅನುಸರಿಸುತ್ತಿರುವ ಏಕರೂಪ ನೀತಿಯನ್ನು ನ್ಯಾಯಮೂರ್ತಿಗಳ ಮುಂದೆ ಪ್ರಸ್ತುತ ಪಡಿಸಬೇಕು,' ಎಂದು ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT