ನವದೆಹಲಿ: ನಕ್ಸಲ್ ಸಂಪರ್ಕ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.
ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ಅವರಿದ್ದ ಪೀಠವು, ಶಿಕ್ಷೆ ವಿಧಿಸುವುದು ಸೇರಿ ಎಲ್ಲ ವಾದಗಳನ್ನು ಮುಕ್ತವಾಗಿರಿಸಿದ್ದು, ಪ್ರಕರಣವನ್ನು ಹೊಸದಾಗಿ ವಿಚಾರಣೆಗೆ ಪರಿಗಣಿಸುವಂತೆ ಮಹಾರಾಷ್ಟ್ರ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ಗೆ ವಾಪಸ್ ಕಳುಹಿಸಿದೆ.
ಶಿಕ್ಷೆ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಈ ಹಿಂದಿನ ಪೀಠ ಈಗಾಗಲೇ ಅಭಿಪ್ರಾಯ ನೀಡಿರುವುದರಿಂದ ಹೈಕೋರ್ಟ್ನ ಬೇರೊಂದು ಪೀಠ ಪ್ರಕರಣದ ವಿಚಾರಣೆ ನಡೆಸುವಂತೆ ಪೀಠವು ಸೂಚಿಸಿದೆ.
ಮೇಲ್ಮನವಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕಿರುವಂತೆ, ಈ ಪ್ರಕರಣವನ್ನು ನಾಲ್ಕು ತಿಂಗಳೊಳಗೆ ವಿಲೇವಾರಿ ಮಾಡುವಂತೆ ಹೈಕೋರ್ಟ್ಗೆ ಪೀಠವು ಗಡುವು ನೀಡಿದೆ.
ವಿಚಾರಣಾ ನ್ಯಾಯಾಲಯವು ಸಾಯಿಬಾಬಾ ಅವರಿಗೆ 2017ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಸಾಯಿಬಾಬಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ್ದ ಬಾಂಬೆ ಹೈಕೋರ್ಟ್ ಅವರನ್ನು 2022ರ ಅಕ್ಟೋಬರ್ 14ರಂದು ಆರೋಪದಿಂದ ಖುಲಾಸೆಗೊಳಿಸಿತ್ತು.