ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೈಸ್ತ –ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ಇಲ್ಲ: ಕೇಂದ್ರ ಸರ್ಕಾರ

Last Updated 10 ನವೆಂಬರ್ 2022, 19:31 IST
ಅಕ್ಷರ ಗಾತ್ರ

ನವದೆಹಲಿ: ‘ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೆ ‘ಪರಿಶಿಷ್ಟ ಜಾತಿ’ಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ಅವರಿಗೆ ಮೀಸಲಾತಿ ನೀಡಿದರೆ, ಹಿಂದೂ ಧರ್ಮದಲ್ಲಿರುವ ಪರಿಶಿಷ್ಟ ಜಾತಿಯ ಜನರ ಹಕ್ಕಿಗೆ ಧಕ್ಕೆಯಾಗುತ್ತದೆ’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಈ ಸಂಬಂಧ ವಸ್ತುಸ್ಥಿತಿಯ ಅಧ್ಯಯನಕ್ಕೆ ತಾನೇ ರಚಿಸಿರುವ ಆಯೋಗವು, ವರದಿ ಸಲ್ಲಿಸುವ ಮುನ್ನವೇ ಸರ್ಕಾರವು ಹೀಗೆ ಹೇಳಿದೆ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕು ಎಂದು ಕೋರಿ ಸಿಪಿಐಎಲ್‌ ಎಂಬ ಸ್ವಯಂಸೇವಾ ಸಂಸ್ಥೆ ಅರ್ಜಿ (ಪಿಐಎಲ್‌) ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಪೀಠವು, ನಿಲುವು ಸ್ಪಷ್ಟಪಡಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ‘ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ಪರಿಶೀಲಿಸಲು ಆಯೋಗ ರಚಿಸುತ್ತೇವೆ’ ಎಂದು ಸರ್ಕಾರವು ಹಿಂದಿನ ವಿಚಾರಣೆ ವೇಳೆ ಪೀಠಕ್ಕೆ ಮಾಹಿತಿ ನೀಡಿತ್ತು.

ಆನಂತರಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್‌ ನೇತೃತ್ವದಲ್ಲಿ ಆಯೋಗ ರಚಿಸಿತ್ತು. ಆಯೋಗವು ವರದಿಯನ್ನು ಇನ್ನಷ್ಟೇ ಸಲ್ಲಿಸಬೇಕಿದೆ. ಆದರೆ ಅದಕ್ಕೂ ಮುನ್ನವೇ, ಸರ್ಕಾರವು ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಬುಧವಾರ ಪ್ರಮಾಣ ಪತ್ರ ಸಲ್ಲಿಸಿದೆ.

‘1950ರ ಸಂವಿಧಾನ (ಪರಿಶಿಷ್ಟ ಜಾತಿ) ಆದೇಶದ ಪ್ರಕಾರ ಪರಿಶಿಷ್ಟ ಜಾತಿಯ ಜನರು ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮದಲ್ಲಿ ಇದ್ದರೆ ಮಾತ್ರ ಅವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬಹುದು. ವಿದೇಶಿ ಧರ್ಮಗಳಾದ ಕ್ರೈಸ್ತ ಮತ್ತು ಇಸ್ಲಾಂಗೆ ಮತಾಂತರವಾದ ದಲಿತರಿಗೆ ಈ ಸ್ಥಾನಮಾನ ಮತ್ತು ಮೀಸಲಾತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ’ ಎಂದು ಸರ್ಕಾರವು ಪ್ರಮಾಣಪತ್ರದಲ್ಲಿ ತನ್ನ ನಿಲುವು ಸ್ಪಷ್ಟಪಡಿಸಿದೆ.

‘ಕ್ರೈಸ್ತ ಮತ್ತು ಇಸ್ಲಾಂನಲ್ಲಿ ಅಸ್ಪೃಶ್ಯತೆಯಂತಹ ದಬ್ಬಾಳಿಕೆಗಳು ಇಲ್ಲ ಎಂಬುದನ್ನು 1950ರ ಸಂವಿಧಾನ (ಪರಿಶಿಷ್ಟ ಜಾತಿ) ಆದೇಶವು ಈಗಾಗಲೇ ಸಾಬೀತು ಮಾಡಿದೆ. ಆ ಎರಡೂ ಧರ್ಮಗಳಲ್ಲಿ ಅಸ್ಪೃಶ್ಯತೆಯಂತಹ ಆಚರಣೆಗಳು ಇಲ್ಲ ಎಂಬ ಕಾರಣಕ್ಕೇ ಪರಿಶಿಷ್ಟ ಜಾತಿಗೆ ಸೇರಿದ ಜನರು ಆ ಧರ್ಮಗಳಿಗೆ ಮತಾಂತರವಾಗಿದ್ದಾರೆ. ಅಲ್ಲಿ ಅವರು ಅಂತಹ ದೌರ್ಜನ್ಯಕ್ಕೆ ಒಳಗಾಗುತ್ತಿಲ್ಲ. ಈ ಕಾರಣದಿಂದ ಅವರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ಮತ್ತು ಮೀಸಲಾತಿ ನೀಡಲು ಸಾಧ್ಯವಿಲ್ಲ’ ಎಂದು ಸರ್ಕಾರವು ಪ್ರಮಾಣ ಪತ್ರದಲ್ಲಿ ಹೇಳಿದೆ.

‘ಕೆಲವು ಸಾಮಾಜಿಕ ಆಚರಣೆಗಳ ಕಾರಣದಿಂದ 1956ರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕರೆಯ ಮೇರೆಗೆ ಪರಿಶಿಷ್ಟ ಜಾತಿಯ ಜನರು ಬೌದ್ಧ ಧರ್ಮಕ್ಕೆ ಮತಾಂತರವಾದರು. ಹೀಗೆ ಮತಾಂತರವಾದವರ ಮೂಲ ಜಾತಿ ಯಾವುದು ಎಂಬುದನ್ನು ಸುಲಭವಾಗಿ ಪತ್ತೆ ಮಾಡಬಹುದು. ಆದರೆ, ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರ ಮೂಲ ಜಾತಿ ಪತ್ತೆ ಮಾಡಲು ಸಾಧ್ಯವಿಲ್ಲ. ಈ ಎರಡೂ ಧರ್ಮಗಳಿಗೆ ನಡೆಯುವ ಮತಾಂತರದ ಪ್ರಕ್ರಿಯೆಯೂ ಭಿನ್ನವಾದುದು. ಅಲ್ಲದೆ ಈ ಧರ್ಮಗಳಿಗೆ ಮತಾಂತರವೂ ಬೇರೆ ಬೇರೆ ಕಾರಣಗಳಿಗೆ ನಡೆಯುತ್ತದೆ’ ಎಂದು ಸರ್ಕಾರ ಹೇಳಿದೆ.

ಸುಪ್ರೀಂ ಕೋರ್ಟ್‌ ಈ ಅರ್ಜಿಯ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿದೆ.

‘ದೌರ್ಜನ್ಯ ದೃಢೀಕರಿಸುವ ದಾಖಲೆ ಇಲ್ಲ’
‘ಹಿಂದೂ ಧರ್ಮದಲ್ಲಿದ್ದಾಗ ಅನುಭವಿಸಿದ್ದಕ್ಕಿಂತ ಹೆಚ್ಚಿನ ದೌರ್ಜನ್ಯವನ್ನು ಕ್ರೈಸ್ತ ಮತ್ತು ಇಸ್ಲಾಂನಲ್ಲಿ ದಲಿತರು ಎದುರಿಸುತ್ತಿದ್ದಾರೆ ಎಂಬುದಕ್ಕೆ ದೃಢೀಕೃತ ಮಾಹಿತಿ ಮತ್ತು ಅಧ್ಯಯನ ಆಧರಿತ ದಾಖಲೆಗಳು ಲಭ್ಯವಿಲ್ಲ.ಎಲ್ಲಾ ಧರ್ಮದಲ್ಲಿರುವ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕು ಎಂದು ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. ಯಾವುದೇ ಅಧ್ಯಯನ ನಡೆಸದೆಯೇ ಅಂತಹ ಶಿಫಾರಸು ಮಾಡಲಾಗಿತ್ತು. ಆ ವರದಿಯು ಲೋಪಗಳಿಂದ ಕೂಡಿತ್ತು. ವಸ್ತುಸ್ಥಿತಿ ಅಧ್ಯಯನ ಮಾಡದೆಯೇ ಎಲ್ಲರಿಗೂ ಮೀಸಲಾತಿ ನೀಡಿದರೆ, ಹಿಂದೂ ಧರ್ಮದಲ್ಲಿರುವ ಪರಿಶಿಷ್ಟ ಜಾತಿಯ ಜನರ ಹಕ್ಕುಗಳನ್ನು ಕಸಿದುಕೊಂಡಂತಾಗುತ್ತದೆ’ ಎಂದು ಸರ್ಕಾರವು ತನ್ನ ಪ್ರಮಾಣ ಪತ್ರದಲ್ಲಿ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT