ನವದೆಹಲಿ: ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಸಂಸದೆ ನವನೀತ್ ಕೌರ್ ರಾಣಾ ಅವರ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸುವ ಬಾಂಬೆ ಹೈಕೋರ್ಟ್ನ ಆದೇಶಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಜೂನ್ 9ರಂದು ರಾಣಾ ಅವರ ಜಾತಿ ಪ್ರಮಾಣಪತ್ರವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿತ್ತು. ನಕಲಿ ದಾಖಲೆಗಳನ್ನು ಬಳಸಿ ಜಾತಿ ಪ್ರಮಾಣಪತ್ರವನ್ನು ಪಡೆಯಲಾಗಿದೆ ಎಂದು ಹೇಳಿದ್ದ ಹೈಕೋರ್ಟ್, ರಾಣಾ ಅವರಿಗೆ ₹ 2 ಲಕ್ಷ ದಂಡವನ್ನೂ ವಿಧಿಸಿತ್ತು.
ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ರಜಾಪೀಠವು, ರಾಣಾ ಅವರ ಪರ ಹಾಜರಿದ್ದ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಅವರ ಅಹವಾಲುಗಳನ್ನು ಪರಿಶೀಲಿಸಿ, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಹಾಗೂ ಸಂಸದೆಯ ಜಾತಿ ಪ್ರಮಾಣಪತ್ರವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಆನಂದ ವಿಠೋಬಾ ಆಡ್ಸುಲ್ ಅವರಿಗೆ ನೋಟಿಸ್ ಜಾರಿ ಮಾಡಿತು.
ಆನಂದ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು.
ಮುಂದಿನ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದ ಪೀಠವು, ಅಲ್ಲಿಯ ತನಕ ಬಾಂಬೆ ಹೈಕೋರ್ಟ್ನ ಆದೇಶವು ತಡೆಹಿಡಿಯಲಾಗಿದೆ. ಮುಂದಿನ ವಿಚಾರಣೆಯಲ್ಲಿ ಈ ಪ್ರಕರಣವನ್ನು ಬಗೆಹರಿಸಲಾಗುವುದು ಎಂದೂ ಹೇಳಿದೆ.
ನವನೀತ್ ರಾಣಾ ಅವರು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅಮರಾವತಿ ಲೋಕಸಭಾ ಕ್ಷೇತ್ರದಿಂದ 2019ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಬೆಂಬಲದಿಂದ ಅವರು ಗೆಲುವು ಸಾಧಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.