ಈ ಬಗ್ಗೆ ಸೋಮವಾರ ಮಲಯಾಳ ಸುದ್ದಿ ವಾಹಿನಿ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ ಅವರು, ’ನಮ್ಮ ಸುದ್ದಿ ವಾಹಿನಿಯು ಕಳೆದ 11 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, 350 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ಮಂದಿ ವೀಕ್ಷಕರಿದ್ದಾರೆ. ಆದರೆ, ಕೇಂದ್ರ ಸರ್ಕಾರ ಸುದ್ದಿವಾಹಿನಿಯನ್ನು ಮುಚ್ಚಿಸಿದೆ. ಕೇರಳ ಹೈಕೋರ್ಟ್ನ ಏಕ ಸದಸ್ಯ ಪೀಠ ಮತ್ತು ವಿಭಾಗೀಯ ಪೀಠ ಸುದ್ದಿ ಸಂಸ್ಥೆ ಮೇಲೆ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿವೆ. ಮಾಹಿತಿ ಹಕ್ಕು ಮತ್ತು ಪತ್ರಿಕಾ ಸ್ವಾತಂತ್ರ್ಯದ ಹಕ್ಕುಗಳಿಗೆ ಸಂಬಂಧಿಸಿದ ಇದು ಗಂಭೀರ ವಿಚಾರ' ಎಂದು ಹೇಳಿದರು.